2026-03-07 01:46:09

1500 crores for controlling human wildlife conflict | ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ 1500 ಕೋಟಿ ಸಚಿವ ಖಂಡ್ರೆ ಸ್ವಾಗತ | Speed News Kannada

1500 crores for controlling human wildlife conflict | ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣಕ್ಕೆ 1500 ಕೋಟಿ ಸಚಿವ ಖಂಡ್ರೆ ಸ್ವಾಗತ | Speed News Kannada

ಬೆಂಗಳೂರು: 2026-27ನೇ ಸಾಲಿನ ಬಜೆಟ್ ನಲ್ಲಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಿಸಲು 1500 ಕೋಟಿ ರೂ. ಘೋಷಿಸಿದ್ದು, ಈ ವರ್ಷ 269 ಕೋಟಿ ಮೀಸಲಿಟ್ಟಿರುವುದನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ವಾಗತಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ದಾಖಲೆಯ 17 ನೇ ಬಜೆಟ್ ನಲ್ಲಿ ವನ್ಯಜೀವಿ ಮಾನವ ಸಂಘರ್ಷ ನಿಗ್ರಹಕ್ಕೆ ಒತ್ತು ನೀಡಿದೆ. ಇದರ ಜೊತೆಗೆ ಈಗಾಗಲೇ ಗ್ರೇಟರ್ ಹೆಸರುಘಟ್ಟ ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಿರುವ ಪ್ರದೇಶದ ಅಭಿವೃದ್ಧಿಗೆ ಕ್ರಮ ಕೈಗೊಂಡಿರುವುದು, ಬೆಂಗಳೂರು ಮಹಾನಗರದಲ್ಲಿ ಶ್ವಾಸತಾಣ ಸಂರಕ್ಷಣೆಯ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಚಿರತೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ 5 ಕೋಟಿ ವೆಚ್ಚದಲ್ಲಿ ಚಿರತೆ ಪುನರ್ವಸತಿ ಕೇಂದ್ರ ಸ್ಥಾಪಿಸುತ್ತಿರುವುದೂ ಮತ್ತೊಂದು ಮಹತ್ವದ ಹೆಜ್ಜೆಯಾಗಿದೆ. 2026-27ರ ಸಾಲಿನಲ್ಲಿ ಅರಣ್ಯ ಇಲಾಖೆಯ ವಿವಿಧ ವೃಂದದಲ್ಲಿ ಖಾಲಿ ಇರುವ ಸುಮಾರು 2,000 ಹುದ್ದೆಗಳ ಭರ್ತಿ ಮಾಡಲಾಗುತ್ತಿದ್ದು, ಇದು ಕೂಡ ಇಲಾಖೆಯ ಸಮಗ್ರ ಕಾರ್ಯವೈಖರಿಯ ಸುಧಾರಣೆಗೆ ಚೈತನ್ಯತುಂಬಲಿದೆ ಎಂದು ತಿಳಿಸಿದ್ದಾರೆ. 
ವಿಶ್ವವಿಖ್ಯಾತ ಮೈಸೂರು ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ  ಪ್ರವಾಸಿಗರನ್ನು ಆಕರ್ಷಿಸಲು ಪ್ರಕೃತಿ ನಿರೂಪಣಾ ಕೇಂದ್ರ ಸ್ಥಾಪನೆಯ ಕ್ರಮವೂ ಸ್ವಾಗತಾರ್ಹವಾಗಿದೆ. ಜಾಗತಿಕ ತಾಪಮಾನ ಏರಿಕೆ ಹಾಗೂ ಹವಾಮಾನ ಬದಲಾವಣೆಯ ಪ್ರತೀಕೂಲ ಪರಿಣಾಮ ಎದುರಿಸುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಶೇ.10ಕ್ಕಿಂತ ಕಡಿಮೆ ಅರಣ್ಯ ಇರುವ ಜಿಲ್ಲೆಗಳಲ್ಲಿ ಸುಮಾರು 75,000 ಹೆಕ್ಟೇರ್‌ ನಲ್ಲಿ ಅರಣ್ಯೀಕರಣ ಚಟುವಟಿಕೆಗಳಿಗೆ ಕೆ.ಕೆ.ಆರ್.ಡಿ.ಬಿ.ಯ 50 ಕೋಟಿ ರೂ. ಸೇರಿದಂತೆ 150 ಕೋಟಿ ರೂ. ಹಂಚಿಕೆ ಮಾಡಿರುವುದನ್ನು ಈಶ್ವರ ಖಂಡ್ರೆ ಸ್ವಾಗತಿಸಿದ್ದಾರೆ.  
ರಾಜ್ಯದ ಜನರಿಗೆ ಶುದ್ಧ ಗಾಳಿಯ ಖಾತ್ರಿಗಾಗಿ ಕರ್ನಾಟಕದಾದ್ಯಂತ 15 ಹೊಸ ಪರಿವೇಷ್ಠಿಕ ನಿರಂತರ ವಾಯು ಗುಣಮಟ್ಟದ ಮಾಪನ ಕೇಂದ್ರಗಳನ್ನು ಸ್ಥಾಪಿಸುತ್ತಿರುವುದು ಅತ್ಯಂತ ಅಗತ್ಯ ಹಾಗೂ ಮಹತ್ವದ ಹೆಜ್ಜೆಯಾಗಿದೆ ಎಂದೂ ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. 
ಮಾಗಡಿಯ ಹುಲಿಕಲ್‌-ಕುದೂರು ಗ್ರಾಮದಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರ ಸ್ಮಾರಕ ನಿರ್ಮಿಸುತ್ತಿರುವುದು ಪರಿಸರ ಪ್ರೇಮಿಗಳಿಗೆ ಸ್ಫೂರ್ತಿಯ ತಾಣವಾಗಲಿದೆ ಎಂದು ಅವರು ತಿಳಿಸಿದ್ದಾರೆ.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.