ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಶಿಕ್ಷೆಯ ಪ್ರಮಾಣ ಪ್ರಕಟಿಸಿದ್ದಾರೆ. 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ್ದು, ಓರ್ವ ಆರೋಪಿ ಇನ್ಸ್ಪೆಕ್ಟರ್ ಚನ್ನಕೇಶವ ಟಿಂಕರಿಕರ್ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ. ಟಿಂಕರಿಕರ್ ಕೊಲೆ ಪ್ರಕರಣದಲ್ಲಿ ಭಾಗಿಯಾಗದೇ ಇದ್ದರೂ, ಭ್ರಷ್ಟಾಚಾರ ಎಸಗಿದ್ದಾರೆ ಅನ್ನೋ ಆರೋಪ ಸಾಬೀತಾದ ಹಿನ್ನೆಲೆ ಕೋರ್ಟ್ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ. ಇನ್ನುಳಿದಂತೆ ಬಸವರಾಜ್ ಮುತ್ತಗಿಗೆ ಮಾಫಿ ಸಾಕ್ಷಿ ಸ್ಥಾನ ಖಚಿತಪಡಿಸಿದೆ. ಮೃತ ಯೋಗೀಶ್ ಗೌಡ ಮಕ್ಕಳಿಗೆ 16 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಸೂಚನೆ ನೀಡಿದೆ.