2026-07-23 12:11:38

20 cr laddus distributed in 5 yearsSpeedNewsKannada

20 cr laddus distributed in 5 yearsSpeedNewsKannada

ಅಮರಾವತಿ: ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಆಡಳಿತದ ಅವಧಿಯಲ್ಲಿ 20 ಕೋಟಿಗೂ ಹೆಚ್ಚು ತಿರುಪತಿ ಲಡ್ಡುಗಳನ್ನು ಕಲಬೆರಕೆ ತುಪ್ಪದಿಂದ ತಯಾರಿಸಿ ಮಾರಾಟ ಮಾಡಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಸ್ಫೋಟಕ ಮಾಹಿತಿ ಹೊರಹಾಕಿದ್ದಾರೆ. 2019 ಮತ್ತು 2024ರ ಅವಧಿಯಲ್ಲಿ ತಿರುಮಲ ತಿರುಪತಿ ದೇವಸ್ಥಾನಕ್ಕೆ (ಟಿಟಿಡಿ) 59.71 ಲಕ್ಷ ಲೀಟರ್ ಕಲಬೆರಕೆ ತುಪ್ಪವನ್ನು ಪೂರೈಕೆ ಮಾಡಲಾಗಿದೆ. ಅದಕ್ಕಾಗಿ 234 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರಾಜ್ಯ ವಿಧಾನಸಭೆಯಲ್ಲಿ ತಿರುಪತಿ ಲಡ್ಡು ಕಲಬೆರಕೆ ಕುರಿತು ನಡೆದ ಚರ್ಚೆಗೆ ಅವರು ಉತ್ತರಿಸಿದರು.20.01 ಕೋಟಿ ಲಡ್ಡುಗಳನ್ನು ಕಲಬೆರಕೆ ತುಪ್ಪದಿಂದ ತಯಾರಿಸಿ ಭಕ್ತರಿಗೆ ಮಾರಾಟ ಮಾಡಲಾಗಿದೆ. ಎಲ್ಲಾ ನಿಯಮಗಳನ್ನು ಉಲ್ಲಂಘಿಸಿ ಮತ್ತು ಗುಣಮಟ್ಟವನ್ನು ಪರೀಕ್ಷಿಸಲು ಪ್ರಯೋಗಾಲಯಗಳನ್ನು ಬೈಪಾಸ್ ಮಾಡುವ ಮೂಲಕ ಕಲಬೆರಕೆ ತುಪ್ಪವನ್ನು ಉತ್ಪಾದಿಸಲು ಮತ್ತು ಟಿಟಿಡಿಗೆ ಪೂರೈಸಲು ಸಿಂಡಿಕೇಟ್ ರಚಿಸಲಾಗಿದೆ ಎಂದು ಅವರು ಆರೋಪಿಸಿದರು.
ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ತುಪ್ಪ ಕಲಬೆರಕೆ ಕುರಿತು ನೀಡಲಾದ ಎನ್‌ಡಿಡಿಬಿ ವರದಿಯನ್ನು ಉಲ್ಲೇಖಿಸಿದರು. ಈ ವಿಷಯ ಸರ್ಕಾರದ ಗಮನಕ್ಕೆ ಬಂದ ನಂತರ, ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲು ನಿರ್ಧರಿಸಲಾಯಿತು. ಇದನ್ನೂ ಅವರು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಹೋದರು. ಇದರಲ್ಲಿ ಯಾವುದೇ ರಾಜಕೀಯ ಇರಬಾರದು, ಎಸ್‌ಐಟಿ ರಚಿಸಿ ತನಿಖೆ ನಡೆಸಬೇಕು ಎಂದು ನ್ಯಾಯಾಲಯ ಹೇಳಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಸದನಕ್ಕೆ ತಿಳಿಸಿದರು.
ಎಸ್‌ಐಟಿ ವರದಿಯ ಪ್ರಕಾರ ಕ್ರಮ ಕೈಗೊಳ್ಳಲು ಸರ್ಕಾರ ಏಕವ್ಯಕ್ತಿ ಸಮಿತಿಯನ್ನು ರಚಿಸಿದ್ದು, ಏಕಸದಸ್ಯ ಸಮಿತಿಯ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
2022ರಲ್ಲಿ ತುಪ್ಪ ಕಲಬೆರಕೆಯ ಕುರಿತು ಸಿಎಫ್‌ಟಿಆರ್‌ಐ ವರದಿಯನ್ನು ನೀಡಿದ್ದರೂ, ಆಗಿನ ಟಿಟಿಡಿ ಅಧ್ಯಕ್ಷರು ಅದನ್ನು ಒಪ್ಪಿಕೊಂಡಿರಲಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಅರ್ಹತೆ ಇಲ್ಲದ ಕಂಪನಿಗಳ ಜೊತೆ ತುಪ್ಪ ಪೂರೈಕೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗಿತ್ತು. 
ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಅವರ ಆಪ್ತ ಸಹಾಯಕ ಚಿನ್ನಪ್ಪಣ್ಣ 4.5 ಕೋಟಿ ರೂ. ಲಂಚ ಪಡೆದಿದ್ದಾರೆ. ಕಲಬೆರಕೆ ತುಪ್ಪ ತಯಾರಿಸಲು ವಿವಿಧ ರೀತಿಯ ರಾಸಾಯನಿಕಗಳನ್ನು ಬಳಸಲಾಗುತ್ತಿತ್ತು ಎಂದು ಕಂಡುಬಂದಿದೆ ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹೇಳಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.