ನವದೆಹಲಿ: ಹೊಸದಾಗಿ ಜಾರಿಗೊಳಿಸಲಾಗಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸಂಪೂರ್ಣ ಜಾರಿಯಾದರೆ ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಯ ಪ್ರಮಾಣ ಶೇ. 80ರಷ್ಟು ಹೆಚ್ಚಾಗಲಿದೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅವರು ಇಂದು ದೆಹಲಿಯಲ್ಲಿ ನಡೆದ 79ನೇ ರೈಸಿಂಗ್ ಡೇ ಪರೇಡ್ನಲ್ಲಿ ಭಾಗವಹಿಸಿ ಪೊಲೀಸರನ್ನು ಉದ್ದೇಶಿಸಿ ಮಾತನಾಡಿದರು.
ದೇಶದ ಕಾನೂನು ವ್ಯವಸ್ಥೆಯಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳು ಅತಿ ದೊಡ್ಡ ಸುಧಾರಣೆಗೆ ನಾಂದಿ ಹಾಡಲಿವೆ. ಇವು ವೇಗವಾಗಿ ಪ್ರಕರಣಗಳನ್ನು ಇತ್ಯರ್ಥಗೊಳಿಸುವುದರ ಜೊತೆಗೆ ಶಿಕ್ಷೆ ವಿಧಿಸಲೂ ನೆರವಾಗಲಿದೆ. ಕೆಲವೇ ವರ್ಷಗಳಲ್ಲಿ ಈ ಕಾನೂನುಗಳು ಇದು ಸಂಪೂರ್ಣ ಜಾರಿಯಾಗಲಿವೆ ಎಂದರು.
ಭಾರತೀಯ ದಂಡ ಸಂಹಿತೆ(ಐಪಿಸಿ), ಅಪರಾಧ ದಂಡಪ್ರಕ್ರಿಯಾ ಸಂಹಿತೆ(ಸಿಆರ್ಪಿಸಿ) ಮತ್ತು ಭಾರತೀಯ ಸಾಕ್ಷ್ಯ ಕಾಯ್ದೆಯ ಬದಲಿಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಹಾಗೂ ಭಾರತೀಯ ಸಾಕ್ಷ್ಯ ಅಧಿನಿಯಮ (ಬಿಎಸ್ಎ)ವನ್ನು 2024ರ ಜುಲೈ 1ರಂದು ಜಾರಿಗೊಳಿಸಲಾಗಿತ್ತು.
ದೇಶದಲ್ಲಿ ನಕ್ಸಲರ ವಿರುದ್ಧದ ಹೋರಾಟವು ಬಹುತೇಕ ಅಂತಿಮ ಘಟ್ಟ ತಲುಪಿದ್ದು, ಮಾರ್ಚ್ ವೇಳೆಗೆ ಅಂತ್ಯ ಹಾಡಲಿದ್ದೇವೆ ಎಂದೂ ಹೇಳಿದರು. ಇದೇ ಸಂದರ್ಭದಲಿ ಅಮಿತ್ ಶಾ ಅವರು ಪೊಲೀಸ್ ಇಲಾಖೆಗೆ ಸಂಬಂಧಿಸಿದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದರು.