ಚಿತ್ರದುರ್ಗ: ಹಿರಿಯ ಬಿಜೆಪಿ ಮುಖಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಭಿಮಾನೋತ್ಸವ ನಾಳೆ ನಡೆಯಲಿದೆ. ಇದಕ್ಕಾಗಿ ಇಡೀ ಕೋಟೆ ನಗರಿ ಸಜ್ಜುಗೊಂಡಿದೆ. ಅಭಿಮಾನೋತ್ಸವದ ಅಂಗವಾಗಿ ಯಡಿಯೂರಪ್ಪ ಅವರು ಇಂದು ಸಂಜೆ ಪುರ ಪ್ರವೇಶ ಮಾಡಲಿದ್ದಾರೆ. ಮೈಸೂರು ದಸರಾ ಮಾದರಿಯಲ್ಲಿ ಅವರನ್ನುಕರೆತರಲು ಉದ್ದೇಶಿಸಲಾಗಿದೆ.ಇದಕ್ಕಾಗಿ ಮೆರವಣಿಗೆ ಮೂಲಕ ಸ್ವಾಗತ ಕೋರಲು ಸಾವಿರಾರು ಬಿಜೆಪಿ ಕಾರ್ಯಕರ್ತರು, ವಿವಿಧ ಕಲಾ ತಂಡಗಳ ಕಲಾವಿದರು ಸಜ್ಜಾಗಿದ್ದಾರೆ.
ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಬಿ.ಡಿ ರಸ್ತೆಯ ಮದಕರಿ ವೃತ್ತದವರೆಗೂ ಮೆರವಣಿಗೆ ನಡೆಯಲಿದೆ. ಮಾರ್ಗದಲ್ಲಿ ಬರುವ ಸಂಗೊಳ್ಳಿ ರಾಯಣ್ಣ ಪ್ರತಿಮೆ, ಗಾಂಧಿ ಪ್ರತಿಮೆ, ಅಂಬೇಡ್ಕರ್ ಪ್ರತಿಮೆ ಹಾಗೂ ಮದಕರಿ ನಾಯಕರ ಪ್ರತಿಮೆಗೆ ಯಡಿಯೂರಪ್ಪ ಅವರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಿದ್ದಾರೆ.
ಮೆರವಣಿಗೆಯಲ್ಲಿ ಪೂರ್ನಕುಂಭ ಹೊತ್ತ 1008 ಮಹಿಳೆಯರು, ನೇಗಿಲು ಹೊತ್ತ 500 ರೈತರು ಮತ್ತು 250 ಮಹಿಳೆಯರು ಒನಕೆ ಓಬವ್ವ ವೇಷಭೂಷಣದೊಂದಿಗೆ ಮೆರವಣಿಗೆಯಲ್ಲಿ ಸಾಗಲಿದ್ದಾರೆ.
ನಾಳೆ ಮಧ್ಯಾಹ್ನ ಅಭಿಮಾನೋತ್ಸವ ನಡೆಯಲಿದೆ. ಸಂಜೆ ವೇಳೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. 10 ಲಕ್ಷಕ್ಕೂ ಹೆಚ್ಚು ಸಾರ್ವಜನಿಕರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಸುಮಾರು 20 ಲಕ್ಷ ಚದರಡಿಯಷ್ಟು ಸಭಾಂಗಣ ಮತ್ತಿತರ ವ್ಯವಸ್ಥೆ ಮಾಡಲಾಗಿದೆ. 2 ಲಕ್ಷಕ್ಕೂ ಹೆಚ್ಚು ಅಧಿಕ ಆಸನ ವ್ಯವಸ್ಥೆ ಮಾಡಲಾಗಿದೆ.
ಮಾದಾರ ಚನ್ನಯ್ಯ ಗುರುಪೀಠದ ಪಕ್ಕದ ವಿಶಾಲ ಮೈದಾನದಲ್ಲಿ ಅಭಿಮಾನೋತ್ಸವ ನಡೆಯಲಿದೆ. ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿವೆ. ತಮಿಳುನಾಡಿನಿಂದ ಬಂದಿರುವ ಕಲಾವಿದರು ಪ್ರವೇಶದ್ವಾರ ಹಾಗೂ ಮುಖ್ಯ ವೇದಿಕೆಯ ಅಲಂಕಾರ ಮಾಡುತ್ತಿದ್ದಾರೆ. ಕಳೆದ 3 ದಿನಗಳಿಂದಲೂ ನಗರದಲ್ಲೇ ವಾಸ್ತವ್ಯ ಹೂಡಿರುವ ಬಿಜೆಪಿ ರಾಜ್ಯ ಘಕಟದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಸಿದ್ಧತೆ ಕಾರ್ಯಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.