ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಪಂಚಮಸಾಲಿ ಪೀಠದಲ್ಲಿ ಇಂದು ತೀವ್ರ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. 2008 ರಿಂದ 2026ರ ವರೆಗಿನ ಮಠದ ಆದಾಯ ಮತ್ತು ವೆಚ್ಚದ ಕುರಿತು 'ಲೆಕ್ಕ ಕೊಡಿ' ಅಭಿಯಾನದ ಹಿನ್ನೆಲೆಯಲ್ಲಿ ಮಠದ ಟ್ರಸ್ಟ್ ಪ್ರತಿಯೊಂದು ಪೈಸೆಗೂ ಲೆಕ್ಕ ನೀಡಲು ಮುಂದಾಗಿದೆ. ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪಗಳ ನಡುವೆ, ಟ್ರಸ್ಟ್ ಇಂದು ಸಾರ್ವಜನಿಕವಾಗಿ ಲೆಕ್ಕ ಒಪ್ಪಿಸಲು ಸಿದ್ಧತೆ ನಡೆಸಿದ್ದು, ಇದು ಪರ ಮತ್ತು ವಿರೋಧ ಗುಂಪುಗಳ ನಡುವೆ ಸಂಘರ್ಷದ ಕಿಡಿ ಹೊತ್ತಿಸಿದೆ.
ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಠದ ಆವರಣದಲ್ಲಿ ಸ್ವಾಮೀಜಿಗಳ ಪರ ಹಾಗೂ ವಿರೋಧ ಬಣಗಳು ಮುಖಾಮುಖಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ನಿಯೋಜಿಸಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಮಠದ ನಾಲ್ಕು ದಿಕ್ಕುಗಳಲ್ಲಿಯೂ ವಿಡಿಯೋ ಚಿತ್ರೀಕರಣ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಪ್ರತಿಯೊಂದು ವಾಹನ ಮತ್ತು ವ್ಯಕ್ತಿಗಳ ಚಲನವಲನದ ಮೇಲೆ ತೀವ್ರ ನಿಗಾ ಇರಿಸಲಾಗಿದೆ.
ಮಠದ ಆವರಣದಲ್ಲಿ ಪರಿಸ್ಥಿತಿ ಸ್ಫೋಟಕವಾಗಿದ್ದು, ವಿವಾದಾತ್ಮಕ ಹೇಳಿಕೆಗಳು ಮತ್ತು ಹಣಕಾಸಿನ ವಿಚಾರದ ಬಗ್ಗೆ ಸ್ಪಷ್ಟನೆ ನೀಡುವಂತೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಒಟ್ಟಾರೆಯಾಗಿ ಹರಿಹರ ಪಂಚಮಸಾಲಿ ಮಠದಲ್ಲಿ ನಡೆಯುತ್ತಿರುವ ಈ 'ಲೆಕ್ಕ ಕೊಡುವ' ಪ್ರಕ್ರಿಯೆಯು ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಕ್ಷಣ ಕ್ಷಣಕ್ಕೂ ಕುತೂಹಲ ಕೆರಳಿಸಿದೆ.