ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಮರ್ಥ ಎಂದು ಎಷ್ಟು ಬಾರಿ ಸಾಬೀತುಪಡಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರಶ್ನಿಸಿದ್ದಾರೆ. ಯಾರು ಏನೇ ಹೇಳಿದರೂ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪಕ್ಷ ಈವರೆಗೆ ನನಗೆ ನೀಡಿದ ಎಲ್ಲಾ ಜವಾಬ್ದಾರಿಗಳನ್ನು ಸಮರ್ಥವಾಗಿ ನಿಭಾಯಿಸಿದ್ದೇನೆ. ಕೆಪಿಸಿಸಿ ಅಧ್ಯಕ್ಷನಾಗಿ ಎಂಟು ವರ್ಷ ಕೆಲಸ ಮಾಡಿದ್ದೇನೆ. ಎರಡು ಬಾರಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಉಪಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ ಎಂದರು.
ಯಾರೋ ಕೆಲವರು ನನ್ನ ಹೆಸರನ್ನು ಕೂಗಿದ ತಕ್ಷಣ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಹಾಗೆ ಕೂಗುವುದನ್ನು ತಪ್ಪು ಎಂದು ಹೇಳಲೂ ಆಗುವುದಿಲ್ಲ. ಮುಖ್ಯಮಂತ್ರಿ ಬದಲಾವಣೆ ಕುರಿತು ಹಾದಿ ಬೀದಿಯಲ್ಲಿ ಚರ್ಚೆ ಮಾಡಲು ಸಾಧ್ಯವಿಲ್ಲ. ಹೆಚ್ಚೆಂದರೆ ಪಕ್ಷದ ಶಾಸಕಾಂಗ ಸಭೆಯಲ್ಲಿ ಚರ್ಚೆ ಮಾಡಬಹುದು. ಉಳಿದಂತೆ ಹೈಕಮಾಂಡ್ ನಾಯಕರು ನಾಲ್ಕು ಗೋಡೆಗಳ ನಡುವೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದರು.
ಎಲ್ಲದಕ್ಕೂ ಮಿಗಿಲಾಗಿ ನಾನು ಪಕ್ಷದ ಶಿಸ್ತಿನ ಸಿಪಾಯಿ. ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುತ್ತೇನೆ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಹೇಳಿಕೆ ನೀಡಿದರೆ ಸಾರ್ವಜನಿಕವಾಗಿ ಚರ್ಚೆಯಾಗಬಹುದಷ್ಟೆ. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿರುವ ಪರಮೇಶ್ವರ್ ಅವರಿಗೆ ಮೊದಲು ಕೂಲಿ ಕೊಡಿ ಎಂದು ರಾಜಣ್ಣ ಹೇಳಿರುವುದಲ್ಲಿ ತಪ್ಪೇನೂ ಇಲ್ಲ ಎಂದರು.