ಹೈದರಾಬಾದ್: ಕೃಷ್ಣಾ ಮೇಲ್ದಂಡೆಯ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಕ್ರಮಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ತಕರಾರು ಎತ್ತಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಜೊತೆ ನಡೆದ ಸಭೆಯಲ್ಲಿ, ನಾಯ್ಡು ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಒಂದುವೇಳೆ ಕರ್ನಾಟಕವು ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಿದರೆ, ಆಂಧ್ರಪ್ರದೇಶದಲ್ಲಿ ನೀರಿನ ಲಭ್ಯತೆಯ ಮೇಲೆ ಗಂಭೀರ ಪರಿಣಾಮ ಉಂಟಾಗಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು ಎಂದು ತಿಳಿದುಬಂದಿದೆ.
ಇದೇ ಸಂದರ್ಭದಲ್ಲಿ ಅವರು, ಆಂಧ್ರಪ್ರದೇಶ-ಒಡಿಶಾ ವಂಶಧಾರ ನದಿ ನೀರಿನ ವಿವಾದವನ್ನು ಶೀಘ್ರವಾಗಿ ಪರಿಹರಿಸಬೇಕು. ವಂಶಧಾರ ಜಲ ವಿವಾದದ ಕುರಿತು ನ್ಯಾಯಮಂಡಳಿಯ ಅಂತಿಮ ವರದಿಯನ್ನು ವಿಳಂಬ ಮಾಡದೆ ಗೆಜೆಟ್ನಲ್ಲಿ ಪ್ರಕಟಿಸಬೇಕು ಎಂದು ಮನವಿ ಮಾಡಿಕೊಂಡರು.
ಗೋದಾವರಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ, ಆಂಧ್ರಪ್ರದೇಶ ಮತ್ತು ತೆಲಂಗಾಣ ನಡುವೆ ನಡೆಯುತ್ತಿರುವ ವಿವಾದ ಕುರಿತೂ ನಾಯ್ಡು ಅವರು ಪ್ರಸ್ತಾಪಿಸಿದ್ದಾರೆ. ಗೋದಾವರಿ ನದಿ ನೀರನ್ನು ಸಮಾನವಾಗಿ ಹಂಚಿಕೆ ಮಾಡಬೇಕು ಎಂದೂ ಅವರು ಆಗ್ರಹಪಡಿಸಿದ್ದಾರೆ.