ಬೆಂಗಳೂರು: ಉತ್ತರ ಕರ್ನಾಟಕ ಭಾಗದ ( ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ) ಹಿಂದುಳಿದ ತಾಲೂಕುಗಳ ಅಭಿವೃದ್ದಿಗೆ ಬಜೆಟ್ ನಲ್ಲಿ 15,000 ಕೋಟಿ ರೂ.ವಿಶೇಷ ಅನುದಾನ ನೀಡುವಂತೆ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಮೇಟಿ ಹಾಗೂ ಪ್ರಧಾನ ಕಾರ್ಯದರ್ಶಿ ಶಂಕರ ಪಾಗೋಜಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ.
ಉತ್ತರ ಕರ್ನಾಟಕ ಭಾಗದ ಜನರು ಬೆಂಗಳೂರಿಗೆ ಉದ್ಯೋಗ ಹಾಗೂ ಕೂಲಿಗಾಗಿ ಬಂದು ವಿವಿಧ ಬಡಾವಣೆಗಳಲ್ಲಿ ವಾಸವಾಗಿದ್ದು, ಸುಮಾರು 25 ಲಕ್ಷಕ್ಕೂ ಹೆಚ್ಚು ಜನರು ಬೆಂಗಳೂರಿನಲ್ಲಿ ಉತ್ತರ ಕರ್ನಾಟದ ಭಾಗದವರು ಇದ್ದಾರೆ.
ಉತ್ತರ ಕರ್ನಾಟಕ ಭಾಗದ ಸಂಸ್ಕೃತಿ ಮತ್ತು ಕಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಸುಮಾರು 25 ಕ್ಕೂ ಉತ್ತರ ಕರ್ನಾಟಕ ಜನರು ಸಂಘಗಳನ್ನು ಕಟ್ಟಿಕೊಂಡು, ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳಿಗೂ ಸ್ಪಂದಿಸುವ ಕೆಲಸ ಮಾಡುತ್ತಿದ್ದಾರೆ. ಉತ್ತರ ಕರ್ನಾಟಕ ಭಾಗ ಈಗಲೂ ಸಾಕಷ್ಟು ಹಿಂದುಳಿದಿದ್ದು, ಅಸಮಾನತೆ ಹೋಗಲಾಡಿಸಲು ಪ್ರಸ್ತುತ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕೆಂದು ವಿನಂತಿಸಿಕೊಂಡಿದ್ದಾರೆ.
ಪ್ರಮುಖ ಬೇಡಿಕೆಗಳು:
ಪ್ರೊ. ಗೋವಿಂದರಾವ್ ವರದಿ ಅನುಷ್ಠಾನಕ್ಕೆ ಉತ್ತರ ಕರ್ನಾಟಕದ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗೆ ಪ್ರತಿ ವರ್ಷ ಬಜೆಟ್ ನಲ್ಲಿ ಕನಿಷ್ಟ 15,000 ಕೋಟಿ ರೂ. ಮೀಸಲಿಡಬೇಕು.
ಹಿಂದುಳಿದಿರುವ ತಾಲೂಕುಗಳಲ್ಲಿ ಪ್ರತಿ ವರ್ಷ ಕನಿಷ್ಠ 25 ಪ್ರಾಥಮಿಕ ಶಾಲೆಗಳ ನಿರ್ಮಾಣ ಹಾಗೂ ಕನಿಷ್ಠ 5 ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣದ ಘೋಷಣೆ ಮಾಡಿ, ಬಜೆಟ್ ನಲ್ಲಿ ಅಗತ್ಯ ಅನುದಾನ ಮೀಸಲಿಡಬೇಕು.
ಉತ್ತರ ಕರ್ನಾಟಕ ಭಾಗದಲ್ಲಿ ವಾಣಿಜ್ಯೋದ್ಯಮ ಬೆಳವಣಿಗೆಗೆ ಏರೋ ಸ್ಪೇಸ್ ಘಟಕ ಆರಂಭಿಸುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಮಾಡಬೇಕು.
ಕಲಬುರ್ಗಿ ವಿಮಾನ ನಿಲ್ದಾಣ ಪುನರ್ ಕಾರ್ಯಾರಂಭ ಮಾಡಲು ಅಗತ್ಯ ಅನುಕೂಲ ಕಲ್ಪಿಸಲು ಬೇಕಾದ ಅನುದಾನ ಬಜೆಟನಲ್ಲಿ ಮೀಸಲಿಡಬೇಕು.
ಕಲಬುರ್ಗಿ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಜವಳಿ ಪಾರ್ಕ್ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಮ ಕೈಗೊಳ್ಳಬೇಕು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮಾದರಿಯಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ವಾರ್ಷಿಕ ಕನಿಷ್ಠ 5 ಸಾವಿರ ಕೋಟಿ ರೂ. ಮೀಸಲಿಡಬೇಕು.
ಕೃಷ್ಣಾ ಮೇಲ್ದಂಡೆ ಯೋಜನೆ 3 ನೇ ಹಂತದ ಅನುಷ್ಠಾನಕ್ಕಾಗಿ ಬಜೆಟ್ ನಲ್ಲಿ ವಾರ್ಷಿಕ ಕನಿಷ್ಠ 10 ಸಾವಿರ ಕೋಟಿ ರೂ. ಮೀಸಲಿಡಬೇಕು