ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ರಾಜ್ಯದಲ್ಲಿ ಎಲ್ಪಿಜಿ (LPG) ಅಭಾವ ತೀವ್ರಗೊಂಡಿದ್ದು, ಆಟೋ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ, ಈ ಸಮಸ್ಯೆಯನ್ನು ಬಗೆಹರಿಸಬೇಕಾದ ಸರ್ಕಾರ ಉಪಚುನಾವಣೆ ಮತ್ತು ಐಪಿಎಲ್ ಗುಂಗಿನಲ್ಲಿ ಮುಳುಗಿದ್ದು, ಚಾಲಕರ ಗೋಳು ಕೇಳುವವರಿಲ್ಲದಂತಾಗಿದೆ ಎಂದು ಆಟೋ ಸಂಘಟನೆಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿವೆ. ಸರ್ಕಾರದ ಈ ನಿರ್ಲಕ್ಷ್ಯದ ಧೋರಣೆಯನ್ನು ಖಂಡಿಸಿರುವ ಸಂಘಟನೆಗಳು, ಹೋರಾಟದ ಹಾದಿ ಹಿಡಿಯಲು ನಿರ್ಧರಿಸಿವೆ.
ಉಪಚುನಾವಣೆ ಪ್ರಚಾರ ಮುಗಿಸಿ ಮರಳಲಿರುವ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರನ್ನು ಇದೇ ವಾರ ಭೇಟಿ ಮಾಡಲು ಆಟೋ ಸಂಘಟನೆಗಳು ತೀರ್ಮಾನಿಸಿವೆ. ಆರ್ಥಿಕ ಸಂಕಷ್ಟದಲ್ಲಿರುವ ಚಾಲಕರಿಗೆ ವಿಶೇಷ ಆರ್ಥಿಕ ನೆರವು ನೀಡಬೇಕು ಮತ್ತು ಮಕ್ಕಳ ಶಾಲಾ ಶುಲ್ಕ ಪಾವತಿಸಲು ಕನಿಷ್ಠ ಎರಡು ತಿಂಗಳ ಕಾಲಾವಕಾಶ ನೀಡಬೇಕು ಎಂಬ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.
ಒಂದೊಮ್ಮೆ ಸರ್ಕಾರ ಈ ವಾರದಲ್ಲಿ ಭೇಟಿಗೆ ಅವಕಾಶ ನೀಡದಿದ್ದರೆ ಅಥವಾ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಸಂಘಟನೆಗಳು ಎಚ್ಚರಿಸಿವೆ. ಸಚಿವರ ಮನೆಗಳಿಗೆ ಮುತ್ತಿಗೆ ಹಾಕುವ ಜೊತೆಗೆ, ರಾಜ್ಯಾದ್ಯಂತ ಆಟೋ ಮತ್ತು ಟ್ಯಾಕ್ಸಿ ಸಂಚಾರವನ್ನು ಬಂದ್ ಮಾಡಿ ಬೃಹತ್ ಹೋರಾಟ ರೂಪಿಸುವುದಾಗಿ ಚಾಲಕರ ಒಕ್ಕೂಟಗಳು ಎಚ್ಚರಿಕೆ ನೀಡಿವೆ.