ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಹೆತ್ತ ತಂದೆ-ತಾಯಿ ಹಾಗೂ ಒಡಹುಟ್ಟಿದ ತಂಗಿಯನ್ನೇ ಭೀಕರವಾಗಿ ಕೊಲೆ ಮಾಡಿ, ಪ್ರಿಯಕರನೊಂದಿಗೆ ಪರಾರಿಯಾಗಿದ್ದ ಯುವತಿಯನ್ನು ಪೊಲೀಸರು ಪಾಂಡಿಚೇರಿಯಲ್ಲಿ ಬಂಧಿಸಿದ್ದಾರೆ. ಪೂರ್ವ ಬೆಂಗಳೂರಿನ ಕೆ.ಆರ್. ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಜೂನ್ 22ರ ತಡರಾತ್ರಿ ಈ ಆಘಾತಕಾರಿ ಘಟನೆ ನಡೆದಿದೆ.
ಸೀಗೇಹಳ್ಳಿಯ ಧಾಮಿಕಾ ಲೇಔಟ್ನಲ್ಲಿರುವ 'ಸಾಯಿ ಗ್ರೀನ್ ಅಪಾರ್ಟೆಂಟ್'ನ ಫ್ಲ್ಯಾಟ್ ಒಂದರಲ್ಲಿ ಮೂರು ಶವಗಳು ಪತ್ತೆಯಾಗುವುದರೊಂದಿಗೆ ಈ ಭೀಕರ ಕೃತ್ಯ ಬೆಳಕಿಗೆ ಬಂದಿದೆ. ಸೋಮಸುಂದರ್ (55), ಅವರ ಪತ್ನಿ ಮುತ್ತುಲಕ್ಷ್ಮಿ (48) ಮತ್ತು ಕಿರಿಯ ಮಗಳು ಸುಪ್ರಿಯಾ (20) ಕೊಲೆಯಾದ ದುರ್ದೈವಿಗಳಾಗಿದ್ದಾರೆ.
ಮೃತ ದಂಪತಿಯ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನ್ನೆತ್ ಈ ಕೊಲೆಗಳನ್ನು ಮಾಡಿದ ಆರೋಪಿಗಳಾಗಿದ್ದಾರೆ. ಲಿವ್-ಇನ್ ರಿಲೇಶನ್ಶಿಪ್ ನಲ್ಲಿದ್ದ ಇವರಿಬ್ಬರು, ಸುಮಾರು ಒಂದೂವರೆ ತಿಂಗಳ ಹಿಂದೆಯಷ್ಟೇ ಈ ಫ್ಯಾಟ್ ಅನ್ನು ಬಾಡಿಗೆಗೆ ಪಡೆದು ಒಟ್ಟಿಗೆ ವಾಸಿಸುತ್ತಿದ್ದರು ಎಂದು ತಿಳಿದುಬಂದಿದೆ.
ಕೃತ್ಯ ಎಸಗಿದ ಬಳಿಕ ತಲೆಮರೆಸಿಕೊಂಡಿದ್ದ ಶ್ವೇತಾಳನ್ನು ಪಾಂಡಿಚೇರಿ ರೈಲ್ವೆ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಪ್ರಿಯಕರ ಕೆನ್ನೆತ್ ನ ಪತ್ತೆಗಾಗಿ ಪೊಲೀಸರು ಕಾರ್ಯಾಚರಣೆ ಮುಂದುವರೆಸಿದ್ದಾರೆ.