ಬೆಂಗಳೂರು: ರಾಜ್ಯದ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ನಲ್ಲಿ ಘೋಷಿಸಲಾಗಿದ್ದ ರೂ.5,300 ಕೋಟಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಕಾರಜೋಳ ಮನವಿ ಸಲ್ಲಿಸಿದ್ದಾರೆ.
ನವದೆಹಲಿಯ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಕಾರಜೋಳ ಅವರು, ಕರ್ನಾಟಕದ ಅದರಲ್ಲೂ ವಿಶೇಷವಾಗಿ ಚಿತ್ರದುರ್ಗದ ರೈತರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿ, ಅನುದಾನ ಬಿಡುಗಡೆ ಮಾಡುವಂತೆ ಮನವಿ ಸಲ್ಲಿಸಿದರು.
ನಂತರ ಮಾತನಾಡಿದ ಕಾರಜೋಳ, ಮೋದಿ ಸಕರಾತ್ಮವಾಗಿ ಸ್ಪಂದಿಸಿದ್ದಾರೆ. ಕೃಷಿ ಸಂಚಯಿನಿ ಯೋಜನೆಯಡಿ ಭದ್ರಾ ಮೇಲ್ದಂಡೆ ಯೋಜನೆಯ ಪರಿಷ್ಕೃತ ಪ್ರಸ್ತಾವನೆಗೆ ಕೇಂದ್ರದ ಅನುಮೋದನೆ ಪಡೆಯಲು ಮತ್ತು ಹಣವನ್ನು ಬಿಡುಗಡೆ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ಸಿಕ್ಕಿದೆ ಎಂದು ತಿಳಿಸಿದರು.
ಹಾವೇರಿ ಸಂಸದರಾದ ಸಿಎಂ ಬಸವರಾಜ ಬೊಮ್ಮಾಯಿ ಅವರು ಕೇಂದ್ರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿ ಭದ್ರಾ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಒತ್ತಡ ಹೇರಿದ್ದಾರೆ ಎಂದು ಕಾರಜೋಳ ತಿಳಿಸಿದರು. ಈ ಹಿಂದೆ ಸಲ್ಲಿಸಲಾದ ಪ್ರಸ್ತಾವನೆಯ ಪ್ರಕಾರ, ಕೇಂದ್ರವು 5,300 ಕೋಟಿ ರೂ.ಗಳ ಅನುದಾನವನ್ನು ನೀಡಬೇಕಿತ್ತು. ಈಗ, ಪರಿಷ್ಕೃತ ಪ್ರಸ್ತಾವನೆಯ ಪ್ರಕಾರ, ಈ ಮೊತ್ತವು ಏರಿಳಿತಗೊಳ್ಳುವ ಸಾಧ್ಯತೆಯಿದೆ. ರಾಜ್ಯ ಸರ್ಕಾರ 21,167 ಕೋಟಿ ರೂ.ಗಳ ಪರಿಷ್ಕೃತ ಪ್ರಸ್ತಾವನೆಯನ್ನು ಸಲ್ಲಿಸಿದೆ. ರಾಜ್ಯ ಸರ್ಕಾರವು ಈಗಾಗಲೇ ಈ ಯೋಜನೆಗೆ ಹನಿ ನೀರಾವರಿ ಹೊರತುಪಡಿಸಿ 10,000 ಕೋಟಿ ರೂ.ಗಳನ್ನು ಖರ್ಚು ಮಾಡಿದೆ. ಉಳಿದ 11,000 ಕೋಟಿ ರೂ.ಗಳಲ್ಲಿ ಕೇಂದ್ರವು ಶೇ. 60 ರಷ್ಚು ಸಹಾಯವನ್ನು ಒದಗಿಸಬೇಕಿದೆ.