ಬೆಂಗಳೂರು: ಕೇಂದ್ರ ಸರ್ಕಾರ ಜಾರಿತೆ ತರಲಿರುವ ನಾಲ್ಕು ಹೊಸ ಕಾರ್ಮಿಕ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ಗೆ ರಾಜ್ಯದಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರು ಸೇರಿದಂತೆ ಮೈಸೂರು, ಹುಬ್ಬಳ್ಳಿ, ಮಂಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೆ ಕೆಲವು ನಗರಗಳಲ್ಲಿ ಯಾವುದೇ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ. ಬೆಂಗಳೂರಿನಲ್ಲಿ ಟೌನ್ ಹಾಲ್ ಎದುರು ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆ ನಡೆಸಿ ಕಾರ್ಮಿಕ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿದವು. ಪ್ರತಿಭಟನೆ ನಡೆಸುತ್ತಿದ್ದ ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.
ಬಂದ್ ನಿಂದ ಯಾವುದೇ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗಿಲ್ಲ. ಶಾಲಾ ಕಾಲೇಜು, ಸಾರ್ವಜನಿಕ ವಲಯದ ಘಟಕಗಳು, ಸಾರಿಗೆ ಬಸ್ಗಳ ಸೇವೆ ಎಂದಿನಂತೆ ಮುಂದುವರೆದಿತ್ತು. ಆಸ್ಪತ್ರೆ, ಆಂಬ್ಯುಲೆನ್ಸ್ , ನೀರು ವಿದ್ಯುತ್ ಪೂರೈಕೆ, ಅಗ್ನಿಶಾಮಕ ಸೇವೆ, ವಿಮಾನ ನಿಲ್ದಾಣ ಮತ್ತು ರೈಲುಗಳು ಸೇರಿದಂತೆ ಅಗತ್ಯ ಸೇವೆಗಳು ನಿರಾತಂಕವಾಗಿ ಮುಂದುವರೆದಿದ್ದವು.