2026-07-23 06:11:25

Big relief for Sonam Wangchuk | ಸೋನಮ್ ವಾಂಗ್‌ಚುಕ್‌ಗೆ ದೊಡ್ಡ ರಿಲೀಫ್ ಹೈಕೋರ್ಟ್‌ನಲ್ಲಿ ನಡೆದಿದ್ದೇನು? | SNK

Big relief for Sonam Wangchuk | ಸೋನಮ್ ವಾಂಗ್‌ಚುಕ್‌ಗೆ ದೊಡ್ಡ ರಿಲೀಫ್ ಹೈಕೋರ್ಟ್‌ನಲ್ಲಿ ನಡೆದಿದ್ದೇನು? | SNK

ನವದೆಹಲಿ- ದೆಹಲಿಯ ಜಂತರ್ ಮಂತರ್‌ನಲ್ಲಿ ಸುದೀರ್ಘ ಉಪವಾಸ ಸತ್ಯಾಗ್ರಹ ನಡೆಸಿ ಆರೋಗ್ಯ ಹದಗೆಟ್ಟಿದ್ದ ಪ್ರಸಿದ್ಧ ಲಡಾಖಿ ಪರಿಸರ ಮತ್ತು ಶಿಕ್ಷಣ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರಿಗೆ ದೆಹಲಿ ಹೈಕೋರ್ಟ್ ಮಹತ್ವದ ರಿಲೀಫ್ ನೀಡಿದೆ. ಅವರನ್ನು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿರುವ ಸರ್ಕಾರಿ ಸ್ವಾಮ್ಯದ ಸಫ್ದರ್ಜಂಗ್ ಆಸ್ಪತ್ರೆಯಿಂದ ಅವರದೇ ಆಯ್ಕೆಯ ಖಾಸಗಿ ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ಹೈಕೋರ್ಟ್ ಮಂಗಳವಾರ ಅನುಮತಿ ನೀಡಿದೆ.

ಉಪವಾಸ ಸತ್ಯಾಗ್ರಹದ ಕಾರಣ ವಾಂಗ್‌ಚುಕ್ ಅವರ ಆರೋಗ್ಯ ಸ್ಥಿತಿ ಏರುಪೇರಾಗಿದ್ದರಿಂದ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆಯ ಅಗತ್ಯವಿದೆ ಎಂದು ಕೋರಿ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ನ್ಯಾಯಾಲಯದ ನಿರ್ದೇಶನಗಳು ಅರ್ಜಿಯ ವಿಚಾರಣೆ ನಡೆಸಿದ ಪೀಠವು,ಸೋನಮ್ ವಾಂಗ್‌ಚುಕ್ ಅವರನ್ನು ಅವರ ಆಯ್ಕೆಯ ಮೇದಾಂತ ಆಸ್ಪತ್ರೆಗೆ ತಕ್ಷಣ ಸ್ಥಳಾಂತರಿಸಬೇಕು.ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಮಾಡಲಾದ ಎಲ್ಲಾ ಚಿಕಿತ್ಸಾ ವಿವರಗಳು, ವರದಿಗಳು ಮತ್ತು ಮೆಡಿಕಲ್ ಹಿಸ್ಟರಿಯನ್ನು ಮೇದಾಂತಕ್ಕೆ ಹಸ್ತಾಂತರಿಸಬೇಕು.ವಾಂಗ್‌ಚುಕ್ ಅವರಿಗೆ ವಿಶೇಷ ನಿಗಾ ವಹಿಸಿ ಚಿಕಿತ್ಸೆ ನೀಡಲು ಮೇದಾಂತ ಆಸ್ಪತ್ರೆಯು ವೈದ್ಯರ ಪ್ರತ್ಯೇಕ ಸಮಿತಿಯನ್ನು (Medical Board) ರಚಿಸಬೇಕು ಎಂದು ಸ್ಪಷ್ಟ ನಿರ್ದೇಶನ ನೀಡಿದೆ. ಈ ಹಿಂದೆ ಸೋನಮ್ ವಾಂಗ್‌ಚುಕ್ ಅವರಿಗೆ ಸಫ್ದರ್ಜಂಗ್ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಬೇಕೆಂಬ ಕೇಂದ್ರ ಸರ್ಕಾರದ ನಿರ್ಧಾರವನ್ನು ನ್ಯಾಯಾಲಯ ಎತ್ತಿಹಿಡಿದಿತ್ತು.

ಕೇಂದ್ರ ಸರ್ಕಾರದ ನಿಲುವು ಬದಲಾವಣೆ ಆದರೆ ಪ್ರಸ್ತುತ ವಿದ್ಯಮಾನದಲ್ಲಿ ಸರ್ಕಾರದ ನಿಲುವಿನಲ್ಲಿಯೂ ಬದಲಾವಣೆ ಕಂಡುಬಂದಿದೆ.ಕೇಂದ್ರ ಸರ್ಕಾರದ ಪರವಾಗಿ ಹಾಜರಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ,

“ವಾಂಗ್‌ಚುಕ್ ಅವರನ್ನು ಮೇದಾಂತ ಆಸ್ಪತ್ರೆಗೆ ಸ್ಥಳಾಂತರಿಸುವುದಕ್ಕೆ ಕೇಂದ್ರ ಸರ್ಕಾರಕ್ಕೆ ಯಾವುದೇ ಆಕ್ಷೇಪವಿಲ್ಲ. ಅವರು ತಮ್ಮಿಷ್ಟದ ಆಸ್ಪತ್ರೆ ಮತ್ತು ವೈದ್ಯರನ್ನು ಆಯ್ಕೆ ಮಾಡಿಕೊಳ್ಳಬಹುದು. ಆದರೆ, ವೈದ್ಯಕೀಯ ಸಲಹೆಗೆ ವಿರುದ್ಧವಾಗಿ (LAMA) ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಬಾರದು,” ಎಂದು ಕೋರಿದರು.

ವಾಂಗ್‌ಚುಕ್ ಅವರ ಬೆಂಬಲಿಗರು ಮತ್ತು ಸುತ್ತಮುತ್ತಲಿನ ಜನರು ಅವರನ್ನು ಆಸ್ಪತ್ರೆಯಿಂದ ಹೊರಗೆ ಕರೆದೊಯ್ದು ಮತ್ತೆ ಪ್ರತಿಭಟನಾ ಸ್ಥಳಕ್ಕೆ ಕರೆದೊಯ್ಯಲು ಯತ್ನಿಸುತ್ತಿದ್ದಾರೆ ಎಂಬ ಆತಂಕವನ್ನು ವ್ಯಕ್ತಪಡಿಸಿದ ಮೆಹ್ತಾ, “ಅವರು ಮತ್ತೆ ಧರಣಿ ಸ್ಥಳಕ್ಕೆ ಮರಳಿದರೆ ಆರೋಗ್ಯ ಇನ್ನಷ್ಟು ಕ್ಷೀಣಿಸಬಹುದು. ಅಂತಹ ಅಪಾಯವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ” ಎಂದು ನ್ಯಾಯಾಲಯದ ಗಮನಕ್ಕೆ ತಂದರು.

ನಿರಂತರ ವೈದ್ಯಕೀಯ ಮೇಲ್ವಿಚಾರಣೆ ಅಗತ್ಯ ವಿಚಾರಣೆ ವೇಳೆ ವಾಂಗ್‌ಚುಕ್ ಅವರ ವೈದ್ಯಕೀಯ ವರದಿಗಳನ್ನು ಪರಿಶೀಲಿಸಿದ ಹಾಗೂ ಚಿಕಿತ್ಸೆ ನೀಡುತ್ತಿರುವ ವೈದ್ಯರೊಂದಿಗೆ ಸಂವಹನ ನಡೆಸಿದ ಹೈಕೋರ್ಟ್, ಅವರಿಗೆ ಸುದೀರ್ಘ ಮತ್ತು ನಿರಂತರ ವೈದ್ಯಕೀಯ ಮೇಲ್ವಿಚಾರಣೆಯ ಅಗತ್ಯವಿದೆ ಎಂಬ ಒಮ್ಮತದ ಅಭಿಪ್ರಾಯಕ್ಕೆ ಬಂದಿದೆ. ಚಿಕಿತ್ಸಕರಲ್ಲೊಬ್ಬರಾದ ಡಾ. ಟಂಡನ್ ಅವರ ಶಿಫಾರಸಿನಂತೆ, ವಾಂಗ್‌ಚುಕ್ ಸಂಪೂರ್ಣ ಗುಣಮುಖರಾಗುವವರೆಗೆ ಆಸ್ಪತ್ರೆಯ ಮೇಲ್ವಿಚಾರಣೆಯಲ್ಲಿಯೇ ಇರಲಿದ್ದಾರೆ.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.