ಬೆಂಗಳೂರು: ಇದೇ 6ರಂದು ಅಧಿವೇಶನ ಆರಂಭವಾಗುತ್ತಿದ್ದು ಸರಣಿ ಪ್ರತಿಭಟನೆಗಳು ನಡೆಯಲಿವೆ. ಸರಕಾರ ಯಾವುದೇ ಭರವಸೆಯನ್ನೂ ಈಡೇರಿಸಿಲ್ಲ ಎಂಬ ಕಾರಣಕ್ಕೆ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಅತಿಥಿ ಉಪನ್ಯಾಸಕರು ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.
ಅವರು ಇಂದು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹೋರಾಟ ಪ್ರಾರಂಭ ಮಾಡಲಿದ್ದಾರೆ. ಅತಿಥಿ ಉಪನ್ಯಾಸಕರ ಆಶ್ವಾಸನೆಯನ್ನೂ ಸರಕಾರ ಈಡೇರಿಸಿಲ್ಲ. ಅವರೂ ಬೀದಿಗಿಳಿದು ಹೋರಾಟ ಮಾಡುವ ಸಂದರ್ಭ ಸೃಷ್ಟಿಯಾಗಿದೆ. ಸಾರಿಗೆ ನೌಕರರು ಮತ್ತು ಬಿಎಂಟಿಸಿ ನೌಕರರಿಗೆ ಪಿಎಫ್- ಗ್ರಾಚ್ಯುಟಿ ಕೊಡದೇ ಅನ್ಯಾಯವಾಗಿದ್ದು, ಅವರೂ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಮತ್ತೊಂದು ಕಡೆ ರಾಜ್ಯದಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ವೈದ್ಯರೂ ಬೀದಿಗಿಳಿದು ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. 108- ಆಂಬುಲೆನ್ಸ್ ಕೆಟ್ಟು ನಿಂತು ನೌಕರರಿಗೆ ಸಂಬಳ ಕೊಟ್ಟಿಲ್ಲ. 34 ತಿಂಗಳ ಬಾಕಿ ಕೊಟ್ಟಿಲ್ಲ ಎಂದು ಗುತ್ತಿಗೆದಾರರು ಪ್ರತಿಭಟನೆಗೆ ಸಜ್ಜಾಗಿದ್ದಾರೆ ಎಂದು ವಿವರಿಸಿದರು.
ಬೆಂಗಳೂರಿನ ಕಸದ ಸಮಸ್ಯೆ ಉಲ್ಬಣಿಸಿದೆ. ಪೌರಕಾರ್ಮಿಕರ ಹೋರಾಟವೂ ನಡೆಯಲಿದ್ದು, ಸರಣಿ ಹೋರಾಟಗಳು ಪ್ರಾರಂಭ ಆಗಲಿವೆ. ಕಾಂಗ್ರೆಸ್ ಸರಕಾರ ಸಂಪೂರ್ಣ ವಿಫಲವಾಗಿದ್ದು, ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ತಿಳಿಸಿದರು.
ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಅಭಿವೃದ್ಧಿಯಿಂದ ಕರ್ನಾಟಕವು ವಂಚಿತವಾಗಿದೆ. ಆಡಳಿತ ಪಕ್ಷದ ಶಾಸಕರೇ ದಂಗೆ ಏಳುತ್ತಿದ್ದಾರೆ. ಮುಖ್ಯಮಂತ್ರಿಗಳು ಕೇಂದ್ರ ಸರಕಾರವನ್ನು ದೂರುವುದನ್ನು ಬಿಟ್ಟು ಈ ಸಮಸ್ಯೆಗಳಿಗೆ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದರು.
ಮಾಜಿ ಸಚಿವ ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಅವರು ಭಾಗವಹಿಸಿದ್ದರು.