2026-03-07 12:59:21

BJP Gears Up For Statewide Protest | ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹ: ರಾಜ್ಯವ್ಯಾಪಿ ಹೋರಾಟಕ್ಕೆ ಬಿಜೆಪಿ ಸಜ್ಜು | Speed News Kannada

BJP Gears Up For Statewide Protest | ಅಬಕಾರಿ ಸಚಿವರ ರಾಜೀನಾಮೆಗೆ ಆಗ್ರಹ: ರಾಜ್ಯವ್ಯಾಪಿ ಹೋರಾಟಕ್ಕೆ ಬಿಜೆಪಿ ಸಜ್ಜು | Speed News Kannada

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಬಕಾರಿ ವಿಚಾರದಲ್ಲಿ ಗಟ್ಟಿಯಾದ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎನ್ನುವುದು ಬಿಜೆಪಿ ಮತ್ತು ಜೆಡಿಎಸ್ ನಿಲುವಾಗಿದೆ. ಅಬಕಾರಿ ಸಚಿವ ತಿಮ್ಮಾಪುರ ಅವರ ರಾಜೀನಾಮೆ ಪಡೆದು ಆಮೇಲೆ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಒತ್ತಾಯಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರವು ಇವತ್ತು ಅಬಕಾರಿ ಇಲಾಖೆಗೂ ಬಂದು ತಲುಪಿದೆ. ರಾಜ್ಯ ಸರಕಾರವು ಒಂದು ಕಡೆ ತನ್ನ ಗ್ಯಾರಂಟಿಗಳಿಗೆ ಹಣ ಕ್ರೋಡೀಕರಿಸಲು ಸಾಧ್ಯವಾಗದೇ ಅಬಕಾರಿ ಇಲಾಖೆಯಲ್ಲಿ ಟಾರ್ಗೆಟ್ ಹೆಚ್ಚಿಸಿ ಕರ್ನಾಟಕವನ್ನು ಕುಡುಕರ ರಾಜ್ಯವಾಗಿ ಮಾಡುತ್ತಿದೆ. ಮನಸೋಇಚ್ಛೆ ಲಿಕ್ಕರ್ ಲೈಸನ್ಸ್‍ಗಳನ್ನು ನೀಡಲಾಗುತ್ತಿದೆ ಎಂದು ಆಕ್ಷೇಪಿಸಿದರು.
ರಾಜ್ಯ ಸರಕಾರದ ನೀತಿಯ ಪರಿಣಾಮವಾಗಿ 500 ಮೀಟರ್‍ಗೆ ಒಂದರಂತೆ ಲಿಕ್ಕರ್ ಅಂಗಡಿ ಸಿಗುವಂತಾಗಿದೆ. ಯಾವುದೇ ಇಲಾಖೆಯನ್ನು ತೆಗೆದುಕೊಂಡರೂ ಇಷ್ಟೊಂದು ಭ್ರಷ್ಟಾಚಾರ ನಡೆಯುತ್ತಿದೆ. ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ ಎಂದು ಅದರ ಅಧ್ಯಕ್ಷರೂ ಬಹಿರಂಗವಾಗಿ ಹೇಳಿದ್ದಾರೆ ಎಂದು ಗಮನ ಸೆಳೆದರು.
ಆಡಿಯೋ ಟೇಪ್ ಬಹಿರಂಗವಾಗಿದ್ದು ಅದರಲ್ಲಿ ಅಬಕಾರಿ ಸಚಿವ ತಿಮ್ಮಾಪುರ, ಅವರ ಮಗ, ಮುಖ್ಯಮಂತ್ರಿಗಳ ಬಗ್ಗೆ ಉಲ್ಲೇಖವಾಗಿದೆ ಎಂದು ಆರೋಪಿಸಿದರು. ಅಬಕಾರಿ ಸಚಿವರು ಹಿಂದೆ ಯಾರ್ಯಾರು ರಾಜೀನಾಮೆ ನೀಡಿದ್ದಾರೆಂದು ಉದ್ದುದ್ದ ಭಾಷಣ ಮಾಡಿದ್ದಾರೆ. ಮಡಿಕೇರಿಯ ಗಣಪತಿಯವರ ಆತ್ಮಹತ್ಯೆ ಪ್ರಕರಣದಲ್ಲೂ ಜಾರ್ಜ್ ಅವರು ರಾಜೀನಾಮೆ ಕೊಡಬೇಕಿತ್ತು ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತಂದರು.
ಈ ಸರಕಾರ ಆಡಳಿತಕ್ಕೆ ಬಂದ ಬಳಿಕ ಇತ್ತೀಚೆಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ನಡೆದಿತ್ತು. ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಅನಿವಾರ್ಯವಾಗಿ ಸಚಿವ ನಾಗೇಂದ್ರ ಅವರು ರಾಜೀನಾಮೆ ಕೊಡುವ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಗಮನ ಸೆಳೆದರು. ನಿನ್ನೆ ಮುಖ್ಯಮಂತ್ರಿಯಾದಿಯಾಗಿ ಸಚಿವರ ಭಂಡತನವನ್ನು ಸದನದಲ್ಲಿ ನೋಡಿದ್ದು, ಎಲ್ಲೋ ಒಂದು ಕಡೆ ಈ ಭ್ರಷ್ಟಾಚಾರವು ಸಚಿವರಿಗೇ ಸೀಮಿತವಾಗಿಲ್ಲ ಎಂಬುದು ಸ್ಪಷ್ಟ ಎಂದರು.
ಕರ್ನಾಟಕವು ಕಾಂಗ್ರೆಸ್ ಹೈಕಮಾಂಡಿಗೆ ಎಟಿಎಂ ಆಗಿ ಪರಿವರ್ತನೆಯಾಗಿದೆ. ರಾಜೀನಾಮೆ ಕೊಡದಂತೆ ಅಬಕಾರಿ ಸಚಿವರ ಮೇಲೂ ಒತ್ತಡ ಇದೆ. ಅವರು ರಾಜೀನಾಮೆ ಕೊಟ್ಟರೆ ಅದು ಯಾರ್ಯಾರ ಬುಡಕ್ಕೆ ಬರುತ್ತದೋ ಗೊತ್ತಿಲ್ಲ. ಹಾಗಾಗಿ ಅವರನ್ನು ರಕ್ಷಿಸುವ ಕೆಲಸವನ್ನು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎಂದು ಆರೋಪಿಸಿದರು. ಬಿಜೆಪಿ- ಜೆಡಿಎಸ್ ನಿನ್ನೆ ಅಹೋರಾತ್ರಿ ಧರಣಿ ಮಾಡಿದ್ದೇವೆ. ಇವತ್ತು ಕೂಡ ಹೋರಾಟ ಮುಂದುವರೆಯಲಿದೆ ಎಂದು ಪ್ರಕಟಿಸಿದರು.

Share:



Author:

...
ಎಚ್‌. ಮಾರುತಿ

ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್‌ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.