ಬೆಂಗಳೂರು: ಧಾರವಾಡದಲ್ಲಿ ನಡೆಯುತ್ತಿರುವ ನಿರುದ್ಯೋಗಿ ಯುವಕರ ಪ್ರತಿಭಟನೆಯನ್ನು ನಾನು ಗಂಭೀರವಾಗಿ ಪರಿಗಣಿಸಿದ್ದೇನೆ. ಅವರ ಆಕ್ರೋಶ, ನಿರೀಕ್ಷೆ, ಹತಾಶೆ ನನಗೆ ಅರ್ಥವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರತಿಭಟನೆ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಣೆ ನೀಡಿದ್ದಾರೆ.
ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದಾಗ 2.64 ಲಕ್ಷ ಸರಕಾರಿ ಹುದ್ದೆಗಳು ಖಾಲಿ ಇದ್ದವು. ಈ ಪ್ರಮಾಣದಲ್ಲಿ ಹುದ್ದೆಗಳು ಖಾಲಿ ಉಳಿದಿದ್ದು ರಾತ್ರೋರಾತ್ರಿ ಅಲ್ಲ. ಹಿಂದಿನ ಬಿಜೆಪಿ ಸರ್ಕಾರ ನೇಮಕಾತಿ ಮಾಡಿಕೊಳ್ಳದ ಕಾರಣ ಖಾಲಿ ಉಳಿದಿವೆ. ರಾಜಕೀಯ ಲಾಭಕ್ಕಾಗಿ ಬಿಜೆಪಿ ನಿರುದ್ಯೋಗಿ ಯುವಕರನ್ನು ದಾರಿ ತಪ್ಪಿಸುತ್ತಿದೆ.
ಬಿಜೆಪಿ ಅಧಿಕಾರದಲ್ಲಿದ್ದ 2019 ರಿಂದ 2023ರ ವರೆಗೆ ಯಾವುದೇ ನೇಮಕಾತಿ ಪ್ರಕ್ರಿಯೆ ನಡೆಯಲೇ ಇಲ್ಲ. ಆದರೂ ನಮ್ಮ ಸರ್ಕಾರ ನೇಮಕಾತಿ ಮಾಡಿಕೊಳ್ಳಲು ಬದ್ದೌಾಗಿದೆ. ಆಂತರಿಕ ಮೀಸಲಾತಿ ಗೊಂದಲದ ಕಾರಣಕ್ಕಾಗಿ ಕೆಲ ಕಾಲ ನೇಮಕಾತಿ ಪ್ರಕ್ರಿಯೆಗಳು ಸ್ಥಗಿತಗೊಂಡಿದ್ದವು. ಆದರೂ ಎರಡೂವರೆ ವರ್ಷದಲ್ಲಿ 40,000 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗಿದೆ. ತಡವಾದ ಕಾರಣಕ್ಕೆ ವಯೋಮಿತಿಯನ್ನು 5 ವರ್ಷ ಸಡಿಲಿಸಲಾಗಿದೆ.
ಉಳಿದ ಖಾಲಿ ಹುದ್ದೆಗಳನ್ನು ಆದಷ್ಟೂ ಶೀಘ್ರ ಮತ್ತು ಪಾರದರ್ಶಕವಾಗಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಉದ್ಯೋಗ ಆಕಾಂಕ್ಷಿಗಳು ತಾಳ್ಮೆಯಿಂದ ಇರಬೇಕು. ನಿಮ್ಮ ಕನಸುಗಳ ಈಡೇರಿಕೆಗೆ ನಮ್ಮ ಸರ್ಕಾರ ಸಿದ್ದ ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.