ಬೆಂಗಳೂರು: ಹೈ ಕಮಾಂಡ್ ಬುಲಾವ್ ಮೇರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿ ತಲುಪಿದ್ದಾರೆ.
ರಾಜ್ಯದಲ್ಲಿ ಉದ್ಭವವಾಗಿರುವ ಪಕ್ಷದ ಆಂತರಿಕ ಬಂಡಾಯ, ನಾಯಕತ್ವ ಗೊಂದಲ ಹಾಗೂ ಸಂಘಟನಾತಕ ಬೆಳವಣಿಗೆಗಳನ್ನು ಕುರಿತು ಚರ್ಚಿಸಲು ಅವರನ್ನು ಕರೆಸಿಕೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಈಗಾಗಲೇ ವಿಜಯೇಂದ್ರ ಅವರು ನೂತನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್ ಅವರನ್ನು ಭೇಟಿ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಇನ್ನೂ ಹಲವಾರು ಕೇಂದ್ರ ಸಚಿವರು ಮತ್ತು ಪಕ್ಷದ ಮುಖಂಡರನ್ನು ಭೇಟಿ ಮಾಡಿ ರಾಜ್ಯದ ಬೆಳವಣಿಗೆಗಳನ್ನು ಕುರಿತು ಮಾಹಿತಿ ನೀಡಲಿದ್ದಾರೆ.
ಈ ಮಧ್ಯೆ ವಿಜಯೇಂದ್ರ ಅವರನ್ನು ಬದಲಾವಣೆ ಮಾಡಲಾಗುತ್ತದೆ ಎಂಬ ಗುಲ್ಲುಗಳೂ ಕೇಳಿ ಬರುತ್ತಿವೆ. ಆದರೆ ಬಿಜೆಪಿ ಹೈಕಮಾಂಡ್ ನಿರ್ಧಾರಗಳನ್ನು ಊಹಿಸಲು ಅಸಾಧ್ಯ ಎಂದು ಮುಖಂಡರೊಬ್ಬರು ಅಭಿಪ್ರಾಯಪಡುತ್ತಾರೆ.
ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ವಿಜಯೇಂದ್ರ ಪರವಾಗಿದ್ದರೆ ಇತರ ವರಿಷ್ಠರು ಬೇರೆ ಆಯ್ಕೆಯತ್ತ ಒಲವು ತೋರಿದ್ದಾರೆ.