ಬೆಂಗಳೂರು: ಕೆ ಆರ್ ಪುರದ ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಬಸವರಾಜ್ ಅವರಿಗೆ ಶರಣಾಗತಿ ಬಿಟ್ಟು ಅನ್ಯ ಮಾರ್ಗ ಇಲ್ಲದಂತಾಗಿದೆ.
ಭೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕಳೆದ ಮಂಗಳವಾರ ಹೈಕೋರ್ಟ್ ವಜಾಗೊಳಿಸಿತ್ತು.
ನಂತರ ಭೈರತಿ ಬಸವರಾಜ್ ಅವರು ನಿರೀಕ್ಷಣಾ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ನಿಯಮಿತ ಜಾಮೀನಿಗಾಗಿ ಅರ್ಜಿ ಸಲ್ಲಿಸುವಂತೆ ಹೇಳಿ, ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.
ಇದೀಗ ಸುಪ್ರೀಂ ಕೋರ್ಟ್ ನಲ್ಲೂ ಜಾಮೀನು ಅರ್ಜಿ ವಜಾಗೊಂಡಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬಸವರಾಜ್ ಅವರನ್ನು ಸಿಐಡಿ ಯಾವುದೇ ಕ್ಷಣದಲ್ಲಿ ಬಂಧಿಸಬಹುದು. ಭೈರತಿ ಬಸವರಾಜ್ ಅವರು ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್ಔಟ್’ ನೋಟಿಸ್ ಸಹ ಜಾರಿ ಮಾಡಲಾಗಿದೆ.
ಕಳೆದ ವರ್ಷ ಜುಲೈನಲ್ಲಿ ಬಿಕ್ಲು ಶಿವನನ್ನು ಕೊಚ್ಚಿ ಕೊಲೆ ಮಾಡಿದ್ದರು. ಹಿಂದಿನ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ತಿಳಿದು ಬಂದಿದೆ. ಶಾಸಕ ಭೈರತಿ ಬಸವರಾಜ್ ಅವರನ್ನು ಐದನೇ ಆರೋಪಿಯಾಗಿದ್ದಾರೆ. ಶಾಸಕರು ಆರೋಪಿಗಳ ಜತೆ ನಿಕಟ ಸಂಪರ್ಕ ಹೊಂದಿರುವುದು ತನಿಖೆಯಿಂದ ದೃಢಪಟ್ಟಿತ್ತು.