ಬೆಂಗಳೂರು: ಗ್ಯಾರಂಟಿಗಳ ಬಗ್ಗೆ ಜನರಲ್ಲಿ ಗೊಂದಲ ಮೂಡಿಸದೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ಶಾಸಕ ಅಶ್ವತ್ಥನಾರಾಯಣ ಆಗ್ರಹಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ವೋಟ್ ಗಾಗಿ ಗ್ಯಾರಂಟಿಗಳನ್ನು ಜಾರಿಗೆ ತಂದರು. ಈಗ ಆ ಗ್ಯಾರಂಟಿಗಳ ಮೇಲೆ ಅವರಿಗೆ ನಂಬಿಕೆ ಇಲ್ಲದಾಗಿದೆ. ಅಲ್ಲಿ ಇಲ್ಲಿ ಮಾತಾಡಿ ಗೊಂದಲ ಮೂಡಿಸುವ ಬದಲು ನಿಮ ಉದ್ದೇಶ ಏನು ಹೇಳಿ? ಎಂದು ಪ್ರಶ್ನಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು, ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗಿವೆ ಎಂದು ಹೇಳಿದ್ದಾರೆ. ಹಾಗಾಗಿ ಗ್ಯಾರಂಟಿಗಳ ಬಗ್ಗೆ ಮೊದಲು ಸರ್ಕಾರ ಸ್ಪಷ್ಟತೆ ಕೊಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣ ಹೆಚ್ಚಳ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದು ಬಹಳ ದುಃಖಕರ ಸಂಗತಿ. ಸರ್ಕಾರ ಇದರ ಗಂಭೀರತೆ, ಸೂಕ್ಷ್ಮತೆ ಅರ್ಥಮಾಡಿಕೊಂಡು ಇದರ ಹಿಂದಿನ ಜಾಲಗಳನ್ನು ಪತ್ತೆ ಹಚ್ಚಬೇಕು ಎಂದು ಹೇಳಿದರು.
ಅಕ್ರಮ ಬಾಂಗ್ಲಾ ನಿವಾಸಿಗಳ ನೆಲೆಗಳ ಮೇಲೆ ಪೊಲೀಸರು ದಾಳಿ ನಡೆಸಿರುವುದು ಉತ್ತಮ ಬೆಳವಣಿಗೆ. ರಾಜ್ಯದಲ್ಲಿ 25 ಲಕ್ಷ ಅಕ್ರಮ ಬಾಂಗ್ಲಾ ದೇಶಿಗರು ಇದ್ದು, ಎಲ್ಲರನ್ನೂ ಪತ್ತೆ ಹಚ್ಚಿ ವಾಪಸ್ ಅವರ ದೇಶಕ್ಕೆ ಕಳಿಸಲಿ ಎಂದು ಸರ್ಕಾರವನ್ನು ಒತ್ತಾಯಿಸಿದರು.
ಖಾಲಿ ಇರುವ ಹುದ್ದೆಗಳ ನೇಮಕಾತಿ ಕುರಿತು, ಅಧಿಕಾರಕ್ಕೆ ಬರುವ ಮುನ್ನ ನೇಮಕಾತಿ ಭರ್ತಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ಕೊಟ್ಟಿತ್ತು. ಅಧಿಕಾರಕ್ಕೆ ಬಂದು ಮೂರು ವರ್ಷ ಆದರೂ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಿಲ್ಲ. ದುರುದ್ದೇಶಪೂರ್ವಕವಾಗಿಯೇ ಸರ್ಕಾರ ವಿಳಂಬ ಮಾಡುತ್ತಿದೆ. ಯುವ ಜನತೆಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿದರು.