ದಾವಣಗೆರೆ: ಪಕ್ಷದಲ್ಲಿ ಸಣ್ಣಪುಟ್ಟ ಸಮಸ್ಯೆಗಳು, ಗೊಂದಲಗಳು ಇರುವುದು ನಿಜ. ಇವನ್ನು ಮುಂದುವರಿಸಲು ಬಿಡುವುದಿಲ್ಲ. ಶೀಘ್ರದಲ್ಲೇ ಬಗೆಹರಿಸಿಕೊಳ್ಳುತ್ತೇವೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯ ಉಸ್ತುವಾರಿ ರಾಧಾಮೋಹನದಾಸ್ ಅಗರವಾಲ್ ಅವರ ಜತೆ ಇಲ್ಲಿಗೆ ಆಗಮಿಸಿದ್ದಾರೆ.
ದಾವಣಗೆರೆ ನಗರದ ಹೊರವಲಯದ ಖಾಸಗಿ ರೆಸಾರ್ಟ್ನಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಬಣದ ಜೊತೆಗೆ ಸಭೆ ನಡೆಸಿದ ನಂತರ ಅವರು ಮಾತನಾಡಿದರು.
ಜಿಲ್ಲೆಯ ಬಿಜೆಪಿಯಲ್ಲಿ ಸಣ್ಣ ಪುಟ್ಟ ಗೊಂದಲ, ಲೋಪದೋಷಗಳಿವೆ. ಎಲ್ಲವನ್ನೂ ಸರಿಪಡಿಸುವ ಪ್ರಯತ್ನ ಮಾಡುತ್ತಿದ್ದೇವೆ. ಪಕ್ಷದ ಮುಖಂಡರೊಂದಿಗೆ ಕುಳಿತು ಚರ್ಚೆ ಮಾಡಲಾಗುತ್ತಿದೆ. ಶೀಘ್ರವೇ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುತ್ತೇವೆ ಎಂದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅನೇಕ ಆಕಾಂಕ್ಷಿಗಳಿದ್ದಾರೆ. ಈ ಹಿನ್ನೆಲೆಯಲ್ಲಿ ಆಕಾಂಕ್ಷಿಗಳ ಸಭೆ ನಡೆಸಲಾಗಿದೆ. ಮತ್ತೊಂದು ಗುಂಪಿನ ಆಕಾಂಕ್ಷಿಗಳ ಅಭಿಪ್ರಾಯವನ್ನು ಮಾಜಿ ಸಂಸದಸ ಸಿದ್ದೇಶ್ವರ ಅವರ ಜಿಎಂಐಟಿಯಲ್ಲಿ ಸಭೆ ಸೇರಿ ಪಡೆಯಲಾಗುತ್ತದೆ. ಅಂತಿಮವಾಗಿ ಎಲ್ಲರಿಗೂ ಒಮ್ಮತ್ತದ ಅಭ್ಯರ್ಥಿ ಕಣಕ್ಕೆ ಇಳಿಸುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಇದಕ್ಕೂ ಮುನ್ನ ಸಿದ್ದೇಶ್ವರ ಅವರು ಬೆಂಬಲಿರ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಎಂ.ಪಿ.ರೇಣುಕಾಚಾರ್ಯ ವಿರುದ್ಧ ಘೋಷಣೆ ಕೂಗಿದರು. ಹೊನ್ನಾಳಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಹಲವು ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಬಿ.ಎಸ್.ಯಡಿಯೂರಪ್ಪ ವಿರುದ್ಧವೂ ಅಸಮಾಧಾನ ಹೊರಹಾಕಿದರು.