ಸೂರಗೊಂಡನಕೊಪ್ಪ: ಸೂರಗೊಂಡನಕೊಪ್ಪದ ಭಾಯಾಗಡ್ದಲ್ಲಿ ನಡೆಯುತ್ತಿರುವ ಸಂತ ಸೇವಾಲಾಲ್ ಅವರ 287ನೇ ಜಯಂತಿ ಸಮಾರಂಭದಲ್ಲಿ ಭಾಗಿಯಾಗಲು ಆಗಮಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬಂಜಾರ ಸಮುದಾಯದ ಜನತೆ ಕಪ್ಪು ಬಟ್ಟೆ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ಇದರಿಂದ ಶಿವಕುಮಾರ್ ಅವರು ಮುಜುಗರಕ್ಕೀಡಾಗಬೇಕಾಯಿತು.
ಶಿವಕುಮಾರ್ ಅವರು ವೇದಿಕೆಗೆ ಆಗಮಿಸುತ್ತಿದ್ದಂತೆ ಸಭಾಂಗಣದಲ್ಲಿದ್ದ ಬಹುತೇಕ ಯುವಕರು ಎದ್ದು ನಿಂತು ಕಪ್ಪು ಬಟ್ಟೆ ಪ್ರದರ್ಶಿಸಿದರು. ರಾಜ್ಯ ಸರ್ಕಾರ ಜಾರಿಗೊಳಿಸಿರುವ ಒಳಮೀಸಲಾತಿಯಿಂದ ಸಮುದಾಯಕ್ಕೆ ಅನ್ಯಾಯ ಆಗಿದೆ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಒಳಮೀಸಲಾತಿ ವಿರೋಧಿಸುವ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿ ನಿಯಂತ್ರಿಸಲು ಪ್ರಯತ್ನಿಸಿದರಾದರೂ ಸಾಧ್ಯವಾಗಲಿಲ್ಲ.
ಬಿಜೆಪಿಯ ಮಾಜಿ ಶಾಸಕ ಪಿ.ರಾಜೀವ್ ಮಧ್ಯೆ ಪ್ರವೇಶಿಸಿ ಸಮಾವೇಶಕ್ಕೆ ಡಿ.ಕೆ.ಶಿವಕುಮಾರ್ ಅವರು ಬಂದಿದ್ದಾರೆ. ಅವರಿಗೆ ಗೌರವ ಕೊಡುವುದು ನಮ್ಮ ಜವಾಬ್ದಾರಿ. ಆಕ್ರೋಶಗೊಂಡವರ ಮನವೊಲಿಸುತ್ತೇವೆ ಎಂದು ಮನವಿ ಮಾಡಿಕೊಂಡರು. ಹಾಗೆಯೇ ಪೊಲೀಸರು ಯಾರನ್ನಾದರೂ ಬಂಧಿಸಿದರೆ ಸುಮ್ಮನೆ ಇರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಮಾತನಾಡಿ ಇದು ಧಾರ್ಮಿಕ ಕಾರ್ಯಕ್ರಮ. ಸಮುದಾಯದ ಜನರು ಸಹಕಾರ ನೀಡಬೇಕು. ಎಲ್ಲರೂ ಕುಳಿತು ಮಾತನಾಡಿ ಪರಿಹಾರ ಕಂಡುಕೊಳ್ಳೋಣ ಎಂದು ಮನ ಒಲಿಸಲು ಪ್ರಯತ್ನಿಸಿದರು. ಆಗಲೂ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಲೇ ಇದ್ದರು.