ಉತ್ತರ ಪ್ರದೇಶದ ವೃಂದಾವನದ ಯಮುನಾ ನದಿಯಲ್ಲಿ ಪಂಜಾಬ್ ಮೂಲದ ಪ್ರವಾಸಿಗರಿದ್ದ ಬೋಟ್ ಮಗುಚಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿದ್ದಾರೆ. ಪಂಜಾಬ್ನ ಲುಧಿಯಾನ ಜಿಲ್ಲೆಯ ಸುಮಾರು 120 ಯಾತ್ರಿಕರ ತಂಡವು ಏಪ್ರಿಲ್ 9 ರಂದು ವೃಂದಾವನಕ್ಕೆ ಪ್ರವಾಸ ಬಂದಿತ್ತು. ಕೇಸಿ ಘಾಟ್ ಬಳಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಬೋಟ್, ನದಿಯಲ್ಲಿ ತೇಲುತ್ತಿದ್ದ ಪಾಂಟೂನ್ಗೆ (ಡ್ರಮ್ಗೆ) ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಮೃತರನ್ನು ಕವಿತಾ ರಾಣಿ, ಚರಂಜಿತ್, ಸಪ್ನಾ ಹನ್ಸ್ ಸೇರಿದಂತೆ ಪಂಜಾಬ್ನ ಜಗ್ರಾಂವ್ ಮತ್ತು ದುಗ್ರಿ ಪ್ರದೇಶದವರು ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಇನ್ನೂ ಐವರು ನಾಪತ್ತೆಯಾಗಿದ್ದು, ಅವರಿಗಾಗಿ ತೀವ್ರ ಹುಡುಕಾಟ ಮುಂದುವರಿದಿದೆ. ಗಾಯಗೊಂಡ 22 ಮಂದಿಯನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಘಟನೆಯ ಹಿನ್ನೆಲೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ರಕ್ಷಣಾ ಕಾರ್ಯದ ಕುರಿತು ಮಾಹಿತಿ ಪಡೆದಿದ್ದಾರೆ. ಪ್ರಸ್ತುತ ಸ್ಥಳದಲ್ಲಿ ಪೊಲೀಸರು, ಎಸ್ಡಿಆರ್ಎಫ್ (SDRF), ಅಗ್ನಿಶಾಮಕ ದಳ ಮತ್ತು ಸೇನೆಯ ತಂಡಗಳು ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದು, ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ನೆರವು ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ.