ಕರ್ನಾಟಕದಲ್ಲಿ ಸದ್ಯಕ್ಕೆ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇಲ್ಲ. ಹೌದು ಕರ್ನಾಟಕದ ಸಚಿವ ಸಂಪುಟ ವಿಸ್ತರಣೆಯು ಇನ್ನಷ್ಟು ಮುಂದಕ್ಕೆ ಹೋಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಒಂದೂವರೆ ತಿಂಗಳಾಗುತ್ತಿದೆ. ಆದರೆ ಇಲ್ಲಿಯ ವರೆಗೆ ಸಚಿವ ಸಂಪುಟ ವಿಸ್ತರಣೆಯ ವಿಚಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ನ ಗೊಂದಲ ಹಾಗೂ ನೀರಸ ಪ್ರಕ್ರಿಯೆ ಮುಂದುವರಿದಿದೆ. ಕರ್ನಾಟಕದಲ್ಲಿ 20 ಸಚಿವ ಸ್ಥಾನ ಖಾಲಿ ಉಳಿದಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಪ್ರಮುಖ ಇಲಾಖೆಗಳಿಗೆ ಸಚಿವರೇ ಇಲ್ಲ. ಇದರಿಂದ ಆಡಳಿತಾತ್ಮಕ ಸಮಸ್ಯೆ ಆಗುತ್ತಿದೆ. ಇದೀಗ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ. ಇದಕ್ಕೆ ಮುಖ್ಯ ಕಾರಣ ಕಾಂಗ್ರೆಸ್ ಹೈಕಮಾಂಡ್ಗೆ ಹೊಸದೊಂದು ತಲೆನೋವು ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಇದೀಗ ಗೋವಾ ಕಾಂಗ್ರೆಸ್ ಬಗ್ಗೆ ತಲೆಕೆಡಿಸಿಕೊಂಡಿದೆ. ಇದರಿಂದ ಸಹಜವಾಗಿಯೇ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ.
ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಕರ್ನಾಟಕ ಕಾಂಗ್ರೆಸ್ ನಾಯಕರು ಸಂಭಾವ್ಯ ಸಚಿವರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದಾರೆ. ಇದಕ್ಕೆ ಹೈಕಮಾಂಡ್ ಅನುಮತಿ ನೀಡಬೇಕಾಗಿದೆ. ಅಲ್ಲದೆ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಈಗಾಗಲೇ ಕಾಂಗ್ರೆಸ್ ಹೈಕಮಾಂಡ್ ಹಂತದಲ್ಲಿ ಹಲವು ಸುತ್ತಿನ ಸಭೆಗಳು ನಡೆದಿವೆ. ಇನ್ನೇನು ಹೊಸ ಸಚಿವ ಸಂಪುಟ ರಚನೆ ಆಗಬೇಕು ಎನ್ನುವಾಗಲೇ ಇದೀಗ ಮತ್ತೊಂದು ಸವಾಲು ಎದುರಾಗಿದೆ. ಕಾಂಗ್ರೆಸ್ ಹೈಕಮಾಂಡ್ಗೆ ದೇಶದ ವಿವಿಧ ರಾಜ್ಯಗಳಲ್ಲಿನ ಕಾಂಗ್ರೆಸ್ನ ಆಂತರಿಕ ಕಚ್ಚಾಟವು ಭಾರೀ ತಲೆನೋವು ತಂದೊಡ್ಡಿದೆ. ಗೋವಾ ಮತ್ತು ಪಂಜಾಬ್ ರಾಜ್ಯದ ಕಾಂಗ್ರೆಸ್ನಲ್ಲಿ ಸಮಸ್ಯೆ ಎದುರಾಗಿದ್ದು, ಅಲ್ಲಿನ ಆಂತರಿಕ ಸಮಸ್ಯೆ ಪರಿಹರಿಸುವುದಕ್ಕೆ ಕಾಂಗ್ರೆಸ್ ಹೈಕಮಾಂಡ್ ಆದ್ಯತೆ ನೀಡುತ್ತಿದೆ. ಇದರಿಂದ ಕರ್ನಾಟಕದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ ಎಂದು ಹೇಳಲಾಗಿದೆ.
ಜುಲೈ 17ರ ನಂತರವೇ ಕಾಂಗ್ರೆಸ್ ಹೈಕಮಾಂಡ್ನಿಂದ ರಾಜ್ಯ ನಾಯಕರಿಗೆ ಆಹ್ವಾನ ಬರುವ ಸಾಧ್ಯತೆ ಇದ್ದು, ಇದಾದ ನಂತರವೇ ನೂತನ ಸಚಿವ ಸಂಪುಟ ಅಥವಾ ವಿಸ್ತರಣೆಗೆ ಸಂಬಂಧಿಸಿದಂತೆ ಚರ್ಚೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಇನ್ನು ರಾಹುಲ್ ಗಾಂಧಿ ಅವರು ಸಹ ವಿದೇಶದಿಂದ ಹಿಂದಿರುಗಿದ ಬೆನ್ನಲ್ಲೇ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಮತ್ತೆ ಮುಂದಕ್ಕೆ ಹೋಗಿದೆ.