ಕಲಬುರಗಿ: ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲೂ ಶಿವಾಜಿ ಜಯಂತಿ ಆಚರಣೆ ಸಂದರ್ಭದಲ್ಲಿ ಕಲ್ಲು ತೂರಾಟ ನಡದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಘಟನೆಯಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಚಿತ್ತಾಪುರ ಕ್ಷೇತ್ರವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುತ್ತಿದ್ದಾರೆ.
ರಾವೂರ್ ಗ್ರಾಮದ ಗೋಕುಲ ನಗರದ ಗಣೇಶ್ ಕಟ್ಟೆಯ ಮೇಲೆ ಶಿವಾಜಿ ಭಾವಚಿತ್ರವನ್ನಿಟ್ಟು ಶಿವಾಜಿ ಜಯಂತಿ ಆಚರಣೆ ಮಾಡಲಾಗುತ್ತಿತ್ತು. ಡಿಜೆ ಹಾಕಿ ಡ್ಯಾನ್ಸ್ ಮಾಡುತ್ತಿದ್ದ ಸಂದರ್ಭದಲ್ಲಿ ಮತ್ತೊಂದು ಸಮುದಾಯ ಆಕ್ಷೇಪ ವ್ಯಕ್ತಪಡಿಸಿದೆ. ಡಿಜೆ ಸೌಂಡ್ ಕಡಿಮೆ ಮಾಡುವಂತೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ಎರಡು ಸಮುದಾಯದ ನಡುವೆ ಕಟ್ಟಿಗೆ, ಕಲ್ಲುಗಳಿಂದ ಹೊಡೆದಾಟ ನಡೆದಿದೆ.
ವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಎರಡು ಸಮುದಾಯಗಳ ನಡುವೆ ಪೊಲೀಸರು ಸಂಧಾನ ನಡೆಸಿ ಸಮಾಧಾನಪಡಿಸಿದ್ದಾರೆ. ಹಾಗಾಗಿ ಯಾವುದೇ ಸಮುದಾಯ ದೂರು ದಾಖಲಿಸಿಲ್ಲ ಎಂದು ತಿಳಿದು ಬಂದಿದೆ.