ಬೆಂಗಳೂರು: ರಾಜ್ಯ ಯುವ ಕಾಂಗ್ರೆಸ್ನ ಎರಡು ಬಣಗಳ ನಡುವಿನ ಭಿನ್ನಾಭಿಪ್ರಾಯ ಬೀದಿಗೆ ಬಂದಿದೆ. ಕೆಪಿಸಿಸಿ ಕಚೇರಿಯಲ್ಲಿ ನಡೆದಿದ್ದ ಸಭೆ ಇಂದು ಅಕ್ಷರಶಃ ರಣರಂಗವಾಗಿ ಮಾರ್ಪಟ್ಟು ತಳ್ಳಾಟ, ನೂಕಾಟದ ಜತೆಗೆ ಕೈಕೈ ಮಿಲಾಯಿಸುವ ಹಂತ ತಲುಪಿತ್ತು.
ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಮೇ 21 ರಂದು ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನೆ ಕುರಿತು ಚರ್ಚಿಸಲು ಇಂದು ಕೆಪಿಸಿಸಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿತ್ತು.ಸಭೆ ಆರಂಭವಾಗುತ್ತಿದ್ದಂತೆ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಹಾಗೂ ಮಾಜಿ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರ ಬೆಂಬಲಿಗರ ನಡುವೆ ಮಾತಿ ಚಕಮಕಿ ಆರಂಭವಾಯಿತು.
ರಾಷ್ಟ್ರೀಯ ಯುವ ಕಾಂಗ್ರೆಸ್ ಆದೇಶದ ಮೇರೆಗೆ ಯುವ ಕಾಂಗ್ರೆಸ್ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಅವರನ್ನು ಇತ್ತೀಚೆಗಷ್ಟೇ ಅವರ ಸ್ಥಾನದಿಂದ ಕೈಬಿಡಲಾಗಿತ್ತು. ಈ ಕ್ರಮದ ವಿರುದ್ಧ ದೀಪಿಕಾ ರೆಡ್ಡಿ ಬೆಂಬಲಿಗರ ಆಕ್ರೋಶ ಸ್ಫೋಟಗೊಂಡಿತು. ಸಭೆಯಲ್ಲಿ ಪರ ವಿರೋಧ ಘೋಷಣೆಗಳನ್ನು ಕೂಗಲಾಯಿತು. ಆಗ ಮಂಜುನಾಥ ಗೌಡ ಸಭೆಗೆ ಅಡ್ಡಿಪಡಿಸದಂತೆ ಎಚ್ಚರಿಕೆ ನೀಡಿದರೂ ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿಲ್ಲ.
ಮಾತಿಗೆ ಮಾತು ಬೆಳೆದು ಎರಡೂ ಬಣಗಳ ಕಾರ್ಯಕರ್ತರು ಪರಸ್ಪರ ತಳ್ಳಾಟ, ನೂಕಾಟ ನಡೆಸಿದ್ದಾರೆ.
ಅಲ್ಲಿಯೇ ಇದ್ದ ಕೆಲವರು ಸಮಾಧಾನಪಡಿಸಲು ಯತ್ನಿಸಿದರೂ, ಪರಿಸ್ಥಿತಿ ನಿಯಂತ್ರಣಕ್ಕೆ ಬರಲಿಲ್ಲ. ಕೊನೆಗೆ ಅಲ್ಲಿದ್ದ ಹಿರಿಯ ನಾಯಕರು ಎರಡೂ ಬಣದವರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.