ಬೆಂಗಳೂರು: ಮಹಾತ್ಮಾ ಗಾಂಧಿ ನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ನಿರ್ಣಯವನ್ನು ಮಂಡಿಸಿ ಮಾತನಾಡಿದ ಅವರು, ವಿಬಿ-ಜಿ ರಾಮ್ ಜಿ ಕಾಯ್ದೆಯಿಂದ ವರ್ಷಕ್ಕೆ 12 ತಿಂಗಳ ಬದಲಾಗಿ ಕೇವಲ 10 ತಿಂಗಳು ಮಾತ್ರ ಕೆಲಸ ಸಿಗಲಿದೆ. ನೀಡುತ್ತದೆ. ಈ ಕಾಯ್ದೆಯಡಿ ಎಲ್ಲಾ ಗ್ರಾಮ ಪಂಚಾಯತಿಗಳು ಸೇರ್ಪಡೆಗೊಳ್ಳುವ ಖಚಿತತೆ ಇಲ್ಲ. ಕಾರ್ಮಿಕರಿಗೆ ನೀಡಲಾಗುವ ಕೂಲಿ ದರ ಕುರಿತೂ ಯಾವುದೇ ಖಾತ್ರಿ ಇಲ್ಲ. ಈ ಅನಿಶ್ಚಿತ ಯೋಜನೆಯಿಂದ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ವಿಶೇಷವಾಗಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಕಾರ್ಮಿಕರು, ಆದಿವಾಸಿಗಳು, ರೈತಾಪಿ ಜನರ ಹಕ್ಕುಗಳನ್ನು ಕಸಿದುಕೊಳ್ಳಲಾಗಿದೆ. ಗ್ರಾಮೀಣ ಭಾಗದ ಕೂಲಿ ಕಾರ್ಮಿಕರನ್ನು ಆಧುನಿಕ ಗುಲಾಮಗಿರಿಗೆ ತಳ್ಳುವ ಪ್ರಯತ್ನವಾಗಿದೆ ಎಂದು ಹೇಳಿದರು. ಈ ಮೇಲ್ಕಂಡ ಎಲ್ಲ ಗಂಭೀರ ಅಂಶಗಳನ್ನು ಪರಿಗಣಿಸಿ, ಕರ್ನಾಟಕ ವಿಧಾನ ಸಭೆಯಲ್ಲಿ ಸರ್ವಾನುಮತದಿಂದ ಈ ಕೆಳಗಿನಂತೆ ನಿರ್ಣಯವನ್ನು ಮಂಡಿಸಲಾಗಿದೆ.
ಆದ್ದರಿಂದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ, ಒಕ್ಕೂಟ ತತ್ವಕ್ಕೆ ವಿರೋಧವಾಗಿರುವ ಮತ್ತು ರಾಜ್ಯದ ಬೊಕ್ಕಸಕ್ಕೆ ತೀವ್ರ ಹೊರೆ ಉಂಟುಮಾಡುವ ವಿಬಿಜಿ ರಾಮ್ ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರವು ತಕ್ಷಣವೇ ರದ್ದುಗೊಳಿಸಬೇಕು.
ವಿಕೇಂದ್ರೀಕರಣ ತತ್ವಕ್ಕೆ ವಿರುದ್ಧವಾಗಿರುವ ಗ್ರಾಮ ಪಂಚಾಯತಿಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿರುವ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ 'ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ' (MGNREGA) ಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಈ ಸದನವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತದೆ. ಆದುದರಿಂದ, ಕೇಂದ್ರ ಸರ್ಕಾರಕ್ಕೆ ಹಾಗೂ ಗೌರವಾನ್ವಿತ ರಾಷ್ಟ್ರಪತಿಗಳಿಗೆ ನಿರ್ಣಯವನ್ನು ಕಳುಹಿಸಿಕೊಡಬೇಕೆಂದು ಈ ಸದನವು ನಿರ್ಣಯಿಸುತ್ತದೆ ಎಂದಿದ್ದಾರೆ. ಈ ಬಗ್ಗೆ ಸದನದಲ್ಲಿ ಚರ್ಚೆ ನಡೆಯಲಿದೆ.