ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯ ಕಾವು ಏರುತ್ತಿದ್ದಂತೆ, ಕಾಂಗ್ರೆಸ್ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಂಪುಟಕ್ಕೆ ಸೇರ್ಪಡೆಯಾಗಲು ಸಚಿವಾಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಇಲಾಖೆಗಳು ಹಾಗೂ ಸಂಪುಟ ಸ್ಥಾನಗಳಿಗಾಗಿ ಶಾಸಕರು ಮತ್ತು ಹಿರಿಯ ನಾಯಕರು ತಮ್ಮದೇ ಆದ ರೀತಿಯಲ್ಲಿ ತೆರೆಮರೆಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಅಲ್ಪಸಂಖ್ಯಾತ ಕೋಟಾದಡಿಯಲ್ಲಿ ಸಂಪುಟ ಸೇರಲು ಜಮೀರ್ ಅಹ್ಮದ್ ಖಾನ್, ರಿಜ್ವಾನ್ ಅರ್ಷದ್, ತನ್ವೀರ್ ಸೇಠ್ ಹಾಗೂ ಖನೀಜ್ ಫಾತಿಮಾ ಅವರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಪಕ್ಷದಲ್ಲಿ ತಮ್ಮದೇ ಆದ ಪ್ರಭಾವ ಹೊಂದಿರುವ ಈ ನಾಯಕರು ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳ ಮಟ್ಟದಲ್ಲಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ.
ಇನ್ನೊಂದೆಡೆ, ಯುವ ಮತ್ತು ಹಿರಿತನದ ಸಮ್ಮಿಶ್ರಣದೊಂದಿಗೆ ಸಚಿವ ಸಂಪುಟವನ್ನು ಸಮತೋಲನಗೊಳಿಸುವ ಪ್ರಯತ್ನಗಳೂ ನಡೆಯುತ್ತಿದ್ದು, ಪ್ರಮುಖ ನಾಯಕರಾದ ಹಂಪನಗೌಡ ಬಾದರ್ಲಿ, ವಿಜಯಾನಂದ ಕಾಶಪ್ಪನವರ್, ಶರತ್ ಬಚ್ಚೇಗೌಡ, ಬಸವರಾಜ ರಾಯರೆಡ್ಡಿ, ಮಾಗಡಿ ಬಾಲಕೃಷ್ಣ ಹಾಗೂ ಅಶೋಕ್ ಪಟ್ಟಣ್ ಅವರ ಹೆಸರುಗಳು ಸಚಿವ ಸ್ಥಾನದ ರೇಸ್ನಲ್ಲಿ ಮುಂಚೂಣಿಯಲ್ಲಿ ಕೇಳಿಬರುತ್ತಿವೆ.
ವಿಧಾನಸಭಾ ಸ್ಪೀಕರ್ ರೇಸ್ನಲ್ಲಿ ಹಿರಿಯರು ಕೇವಲ ಸಚಿವ ಸ್ಥಾನ ಮಾತ್ರವಲ್ಲದೆ, ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ಗೌರವದ ಹುದ್ದೆಗಾಗಿಯೂ ಪಕ್ಷದ ಹಿರಿಯ ನಾಯಕರ ನಡುವೆ ದೊಡ್ಡ ಸ್ಪರ್ಧೆ ಏರ್ಪಟ್ಟಿದೆ. ಅನುಭವಿ ನಾಯಕರಾದ ಎಚ್.ಕೆ. ಪಾಟೀಲ್, ದಿನೇಶ್ ಗುಂಡೂರಾವ್ ಹಾಗೂ ಆರ್.ವಿ. ದೇಶಪಾಂಡೆ ಅವರ ಹೆಸರುಗಳು ಸ್ಪೀಕರ್ ರೇಸ್ನಲ್ಲಿ ಪ್ರಮುಖವಾಗಿ ಕೇಳಿಬರುತ್ತಿದ್ದು, ಅಂತಿಮವಾಗಿ ಯಾರಿಗೆ ಈ ಹೊಣೆ ಸಿಗಲಿದೆ ಎಂಬುದು ಕುತೂಹಲ ಮೂಡಿಸಿದೆ.