ಬೆಂಗಳೂರು: ಜೆಡಿಎಸ್ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೆಡಿಎಸ್ ಮುಖಂಡ, ಮೇಲ್ಮನೆ ಸದಸ್ಯ ಸೂರಜ್ ರೇವಣ್ಣ ಅವರಿಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನೆಡೆಯಾಗಿದೆ.
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣದಿಂದ ಕೈಬಿಡುವಂತೆ ಕೋರಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.
ಸೂರಜ್ ರೇವಣ್ಣ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ಕುರಿತು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಅರ್ಜಿಯನ್ನು ತಿರಸ್ಕರಿಸಿ ಆದೇಶ ಪ್ರಕಟಿಸಿದರು.
ಜೆಡಿಎಸ್ ಕಾರ್ಯಕರ್ತರೊಬ್ಬರು ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದರು. ಈ ಸಂಬಂಧ 2024ರ ಜೂನ್ 22ರಂದು ಹೊಳೆನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ಎಫ್ಐಆರ್ ದಾಖಲಿಸಿ, ಜೂನ್ 23ರಂದು ಸೂರಜ್ ರೇವಣ್ಣ ಅವರನ್ನು ಬಂಧಿಸಿದ್ದರು. ಒಂದು ತಿಂಗಳ ನಂತರ ಜಾಮೀನು ಪಡೆದು ಬಿಡುಗಡೆಗೊಂಡಿದ್ದರು.