ರಾಜ್ಯದ ಎರಡು ಪ್ರಮುಖ ವಿಧಾನಸಭಾ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಉಪಚುನಾವಣೆಯ ಕಣ ರಂಗೇರಿದ್ದು, ಇಂದು ಸಂಜೆ 5 ಗಂಟೆಗೆ ಬಹಿರಂಗ ಪ್ರಚಾರಕ್ಕೆ ಅಧಿಕೃತವಾಗಿ ತೆರೆ ಬೀಳಲಿದೆ.ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಸಿಎಂ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಅನುಕಂಪದ ಆಧಾರದ ಮೇಲೆ ಕುಟುಂಬ ಸದಸ್ಯರಿಗೇ ಟಿಕೆಟ್ ನೀಡಿರುವ ಕಾಂಗ್ರೆಸ್, ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಸಚಿವರ ದಂಡನ್ನೇ ಪ್ರಚಾರಕ್ಕೆ ಇಳಿಸಿ ಗೆಲುವಿನ ವಿಶ್ವಾಸದಲ್ಲಿದೆ.
ಇತ್ತ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಇದು ಮೊದಲ ಅಗ್ನಿಪರೀಕ್ಷೆ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ ಮತ್ತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅಬ್ಬರದ ರೋಡ್ ಶೋ ನಡೆಸುವ ಮೂಲಕ ಆಡಳಿತ ಪಕ್ಷಕ್ಕೆ ಮುಜುಗರ ತರಲು ಕಸರತ್ತು ನಡೆಸುತ್ತಿದ್ದಾರೆ. ಬಾಗಲಕೋಟೆಯಲ್ಲಿ ಭಿನ್ನಮತ ಶಮನ ಹಾಗೂ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರ ಅಸಮಾಧಾನ ತಮಗೆ ಪ್ಲಸ್ ಪಾಯಿಂಟ್ ಆಗಲಿದೆ ಎಂಬುದು ಕಮಲ ಪಡೆಯ ಲೆಕ್ಕಾಚಾರ.
ಇನ್ನು ರಾಜ್ಯದ ಜೊತೆಗೆ ನೆರೆರಾಜ್ಯ ಕೇರಳ, ಅಸ್ಸಾಂ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲೂ ಇಂದು ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ. ಪ್ರಧಾನಿ ಮೋದಿ ಹಾಗೂ ರಾಹುಲ್ ಗಾಂಧಿ ಸೇರಿದಂತೆ ರಾಷ್ಟ್ರೀಯ ನಾಯಕರು ಅಂತಿಮ ಹಂತದ ಮತ ಬೇಟೆಯಲ್ಲಿ ತೊಡಗಿದ್ದಾರೆ.ಒಟ್ಟಾರೆ ಏಪ್ರಿಲ್ 9ರ ಮತದಾನಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮತದಾರ ಯಾರ ಕೈ ಹಿಡಿಯಲಿದ್ದಾನೆ ಎಂಬುದನ್ನು ಕಾದು ನೋಡಬೇಕಿದೆ.