ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಹೈವೋಲ್ಟೇಜ್ ಪಡೆದುಕೊಂಡಿದೆ. ದಾವಣಗೆರೆ ದಕ್ಷಿಣ ಕ್ಷೆತ್ರಕ್ಕೆ ಕಾಂಗ್ರೆಸ್ ಹೈ ಕಮಾಂಡ್ ಸಮರ್ಥ್ ಶಾಮನೂರಿಗೆ ಟಿಕೆಟ್ ಘೋಷಣೆಯನ್ನು ಮಾಡಿತ್ತು. ಇದರಿಂದ ದಾವಣಗೆರೆ ದಕ್ಷಿಣ ಕ್ಷೇತ್ರದ ಮುಸ್ಲಿಂ ಸಮುದಾಯದವರು ಕಾಂಗ್ರೆಸ್ ವಿರುದ್ಧ ತೊಡೆತಟ್ಟಿ ಕಣಕ್ಕೆ ಇಳಿದಿದ್ದಾರೆ. ಸಾದಿಕ್ ಪೈಲ್ವಾನ್ ನಾಮಪತ್ರ ತಿರಸ್ಕೃತವಾಗಿರುವುದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಪೈಲ್ವಾನ್ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಮತದಾರರೇ ನಿರ್ಣಾಯಕ. ಇಲ್ಲಿ ಒಟ್ಟು 64,246 ಮುಸ್ಲಿಂ ಸಮುದಾಯದ ಮತದಾರರಿದ್ದಾರೆ. ಆದರೆ ಹೈಕಮಾಂಡ್ ಸಮರ್ಥ್ ಶಾಮನೂರು ಅವರನ್ನು ಅಭ್ಯರ್ಥಿ ಮಾಡಿದೆ. ಸಮರ್ಥ್ ಜೊತೆಗೆ 36 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಒಟ್ಟು ಅಭ್ಯರ್ಥಿಗಳಲ್ಲಿ 23 ಮಂದಿ ಮುಸ್ಲಿಂ ಸಮುದಾಯದವರೇ ಇದ್ದಾರೆ. ಕಾಂಗ್ರೆಸ್ಗೆ ಇದು ನುಂಗಲಾರದ ಬಿಸಿ ತುಪ್ಪವಾಗಿದೆ.
ಒಟ್ಟಿನಲ್ಲಿ, ದಾವಣೆಗೆರೆಯಲ್ಲಿ ಬಂಡಾಯದ ಬೆಂಕಿ ಕಾಂಗ್ರೆಸ್ಗೆ ಟೆನ್ಷನ್ ತಂದಿಟ್ಟಿದ್ದು, ಈ ಬಗ್ಗೆ ವಿಧಾನಸೌಧದಲ್ಲಿ ಕಾಂಗ್ರೆಸ್ನ ಮುಸ್ಲಿಂ ನಾಯಕರು ಮಂಗಳವಾರ ಸಭೆ ನಡೆಸಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್, ಶಾಸಕರಾದ ತನ್ವೀರ್ ಸೇಠ್, ರಿಜ್ವಾನ್ ಅರ್ಷದ್ ಸೇರಿ ಹಲವರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಪಸಂಖ್ಯಾತ ಸಮುದಾಯದ ನಾಯಕರ ಮನವೊಲಿಕೆ, ಮತಗಳು ಚದುರಿಹೋಗದಂತೆ ತಂತ್ರಗಾರಿಕೆ ಬಗ್ಗೆ ಚರ್ಚೆ ನಡೆಸಿದ್ದಾರೆ.