ನವದೆಹಲಿ: ದೇಶಾದ್ಯಂತ ನಡೆಯುತ್ತಿರುವ ಡಿಜಿಟಲ್ ಅರೆಸ್ಟ್ ಪ್ರಕರಣಗಳನ್ನು ಪತ್ತೆ ಹಚ್ಚಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸಿಬಿಐಗೆ ಸೂಚಿಸಿದೆ. ಜೊತೆಗೆ ಡಿಜಿಟಲ್ ಅರೆಸ್ಟ್ ಪ್ರಕರಣಗಳ ತನಿಖೆ ಮುಂದುವರೆಸಲು ಸಿಬಿಐಗೆ ಅನುಮತಿ ನೀಡುವಂತೆ ಗುಜರಾತ್ ಮತ್ತು ದೆಹಲಿ ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಸಿದೆ. ಡಿಜಿಟಲ್ ಅರೆಸ್ಟ್ ಪ್ರಕರಣಗಳಲ್ಲಿ ಗ್ರಾಹಕರಿಗೆ ಪರಿಹಾರ ವಿತರಿಸಲು ಆರ್ ಬಿ ಐ ಮತ್ತು ದೂರ ಸಂಪರ್ಕ ಇಲಾಖೆ ಜಂಟಿಯಾಗಿ ಚೌಕಟ್ಟು ರೂಪಿಸುವಂತೆಯೂ ಸುಪ್ರೀಂ ಕೋರ್ಟ್ ಸೂಚಿಸಿದೆ.
ಡಿಜಿಟಲ್ ವಂಚನೆಗೆ ಒಳಗಾದವರಿಗೆ ಪರಿಹಾರ ವಿತರಿಸಲು ಅಮಿಕಸ್ ಕ್ಯೂರಿ ಮಂಡಿಸಿದ್ದ ಸಲಹೆಗಳನ್ನು ಪರಿಶೀಲಿಸುವಂತೆ ಸುಪ್ರೀಂಕೋರ್ಟ್ ಡಿಸೆಂಬರ್ 16ರಂದು ಸೂಚನೆ ನೀಡಿತ್ತು. ಸೈಬರ್ ಅಪರಾಧಿಗಳು ದೇಶದಿಂದ ದೋಚುತ್ತಿರುವ ಅಪಾರ ಪ್ರಮಾಣದ ಹಣದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು.
ಸೈಬರ್ ಅಪರಾಧಿಗಳ ಜಾಡನ್ನು ಪತ್ತೆ ಹಚ್ಚಲು ಮತ್ತು ಅಕ್ರಮ ವಹಿವಾಟು ನಡೆಯುವ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಲು ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನು ಏಕೆ ಬಳಸುತ್ತಿಲ್ಲ ಎಂದು ಆರ್ ಬಿ ಐಗೆ ಸುಪ್ರೀಂಕೋರ್ಟ್ ಪ್ರಶ್ನಿಸಿತ್ತು. ಡಿಜಿಟಲ್ ವಂಚನೆ ಪ್ರಕರಣಗಳಲ್ಲಿ , ಸೈಬರ್ ಅಪರಾಧಿಗಳು ಮಾತ್ರವಲ್ಲ ಬ್ಯಾಂಕ್ ಅಧಿಕಾರಿಗಳ ಶಾಮೀಲು ಹಾಗೂ ನಿರ್ಲಕ್ಷವನ್ನು ಆಗಾಗ್ಗೆ ಪರಿಶೀಲನೆಗೆ ಒಳಪಡಿಸುತ್ತಿರಬೇಕು. ಈ ನಿಟ್ಟಿನಲ್ಲಿ ಆರ್ ಬಿ ಐ ಬ್ಯಾಂಕುಗಳಿಗೆ ಸೂಚನೆ ನೀಡಬೇಕು ಎಂದು ನ್ಯಾಯಪೀಠ ಹೇಳಿದೆ.