2026-07-23 06:36:29

Dinesh Gundu Rao | ವಿಮಾ ಕಂಪನಿಗಳಿಂದ ಪರಿಹಾರ ಪಡೆಯಲು ಹೊಸ ಆ್ಯಪ್ ಬಿಡುಗಡೆ: ಸಚಿವ ದಿನೇಶ್‌ ಗುಂಡೂರಾವ್‌ | Speed News kannada

Dinesh Gundu Rao | ವಿಮಾ ಕಂಪನಿಗಳಿಂದ ಪರಿಹಾರ ಪಡೆಯಲು ಹೊಸ ಆ್ಯಪ್ ಬಿಡುಗಡೆ: ಸಚಿವ ದಿನೇಶ್‌ ಗುಂಡೂರಾವ್‌ | Speed News kannada

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಸಾರಿಗೆ ಇಲಾಖೆ, ಗೃಹ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿಂದು ಆಯೋಜಿಸಲಾಗಿದ್ದ 'ಇ-ಡಾರ್' (e-DAR) ಅನುಷ್ಠಾನ ಹಾಗೂ 'ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚಾರಣೆ-2026'ರ ಸಮಾರೋಪ ಸಮಾರಂಭ ನಡೆಯಿತು.
ಸಮಾರಂಭದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್‌, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ.ಸಲೀಂ, ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಮಹೇಶ್ವರ್ ರಾವ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
 ಈ ಸಂದರ್ಭದಲ್ಲಿ ವಿಮೆ ಪಡೆಯಲು ಹೊಸ ಆ್ಯಪ್ ಬಿಡುಗಡೆಗೊಳಿಸಲಾಯಿತು. ಈ ಆಪ್‌ ಕುರಿತು ಮಾಹಿತಿ ನೀಡಿದ ದಿನೇಶ್‌ ಗುಂಡೂರಾವ್‌ ಅವರು, ರಸ್ತೆ ಅಪಘಾತಗಳ ಸಂದರ್ಭದಲ್ಲಿ ಸಂತ್ರಸ್ತ ಕುಟುಂಬಗಳು ಇನ್ಶುರೆನ್ಸ್ ಕಂಪನಿಗಳಿಂದ ಪರಿಹಾರ ಪಡೆಯಲು ಅನುಭವಿಸುತ್ತಿದ್ದ ವಿಳಂಬ ಮತ್ತು ತೊಂದರೆಗಳಿಗೆ ಈ ಹೊಸ ಆ್ಯಪ್ ಶಾಶ್ವತ ಪರಿಹಾರ ನೀಡಲಿದೆ ಎಂದರು. 
ಅಪಘಾತ ಸಂಭವಿಸಿದಾಗ ಸ್ಥಳಕ್ಕೆ ಮೊದಲು ಧಾವಿಸುವ ಗೃಹ ಇಲಾಖೆಯ ಪೊಲೀಸ್ ಸಿಬ್ಬಂದಿ ನೀಡುವ ವರದಿ, ಸಾರಿಗೆ ಇಲಾಖೆಯ ಮಾಹಿತಿ ಹಾಗೂ ಆರೋಗ್ಯ ಇಲಾಖೆಯ ಚಿಕಿತ್ಸಾ ವಿವರಗಳನ್ನೆಲ್ಲ ಈ ಡಿಜಿಟಲ್ ವೇದಿಕೆ ಒಗ್ಗೂಡಿಸಲಿದ್ದು, ಇದರಿಂದ ವಿಮಾ ಕಂಪನಿಗಳು ಅತ್ಯಂತ ವೇಗವಾಗಿ ಪರಿಹಾರ ಧನವನ್ನು ವಿತರಿಸಲು ಸಾಧ್ಯವಾಗುತ್ತದೆ.
ಸಾಮಾನ್ಯವಾಗಿ ಅಪಘಾತದಲ್ಲಿ ವ್ಯಕ್ತಿಯ ಪ್ರಾಣಹಾನಿಯಾದಾಗ ಆತನನ್ನು ನಂಬಿದ ಕುಟುಂಬಕ್ಕೆ ಉಂಟಾಗುವ ಆರ್ಥಿಕ ನಷ್ಟ ತುಂಬಲಾರದದ್ದು. ಇಂತಹ ಕಷ್ಟದ ಸಮಯದಲ್ಲಿ ಇನ್ಶುರೆನ್ಸ್ ಹಣ ಪಡೆಯುವುದೇ ಒಂದು ದೊಡ್ಡ ಸವಾಲಾಗಿ ಪರಿಣಮಿಸಿರುವುದು ವಿಷಾದನೀಯ. 
ನೊಂದ ಕುಟುಂಬಗಳು ಮತ್ತಷ್ಟು ಕಷ್ಟಕ್ಕೆ ಸಿಲುಕಬಾರದು ಎಂಬ ಮಾನವೀಯ ಉದ್ದೇಶದಿಂದ ಈ ತಂತ್ರಜ್ಞಾನವನ್ನು ಜಾರಿಗೆ ತರಲಾಗಿದೆ. ಇದರೊಂದಿಗೆ, ಮಹಿಳೆಯರು ಮತ್ತು ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ 'ಆಟೋ ಚಾಲಕರ ಡಿಸ್ಪ್ಲೇ ಕಾರ್ಡ್'ಗಳನ್ನು ಬಿಡುಗಡೆ ಮಾಡಿ ವಿತರಿಸಲಾಯಿತು ಎಂದು ಹೇಳಿದರು.

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.