2026-06-05 11:53:31

ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಸಿಎಂ ಶಿವಕುಮಾರ್‌ ಅವರಿಗೆ ಬಿಜೆಪಿ ಸವಾಲು|Speed News Kannada

 ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ: ಸಿಎಂ ಶಿವಕುಮಾರ್‌ ಅವರಿಗೆ ಬಿಜೆಪಿ ಸವಾಲು|Speed News Kannada

ಬೆಂಗಳೂರು: ಭ್ರಷ್ಟಾಚಾರರಹಿತ ಆಡಳಿತ ನೀಡಲು ಸರ್ಕಾರಕ್ಕೆ ಸಾಧ್ಯವಿಲ್ಲ ಎಂದಾದರೆ ಜಿಬಿಎ ಹಾಗೂ ಸ್ಥಳೀಯ ಸಂಸ್ಥೆ ಚುನಾವಣೆ ಜೊತೆಗೆ ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆ ಎದುರಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸವಾಲು ಎಸೆದಿದ್ದಾರೆ.

ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎರಡು ವರ್ಷದಿಂದ ಸಿಎಂ ಕುರ್ಚಿಗೆ ಹಗ್ಗ ಜಗ್ಗಾಟ ನನಡೆಯುತ್ತಿತ್ತು. ಸಿಎಂ ಆಗಿ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ 48 ಗಂಟೆಗಳ ಒಳಗೆ ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಿದ್ದಾರೆ. ಇನ್ನೂ ಈ ಕಾಂಗ್ರೆಸ್ ಸರ್ಕಾರ ಕಚ್ಚಾಟದಿಂದ ಹೊರಗೆ ಬರುವ ಲಕ್ಷಣ ಇಲ್ಲ ಎಂದರು.

ರಾಜ್ಯದಲ್ಲಿ ಏನೇನೂ ಅಭಿವೃದ್ಧಿ ಕಾರ್ಯ ಮಾಡದ ಕಾಂಗ್ರೆಸ್ ಸರ್ಕಾರ ಇನ್ನೂ ಕಚ್ಚಾಟದಿಂದ ಹೊರಗೆ ಬಂದಿಲ್ಲ. ಈ ಸರ್ಕಾರದ ಬಗ್ಗೆ ಜನ ಬೇಸತ್ತಿದ್ದಾರೆ. ರೈತರು ಬೀದಿದಿಳಿದು ಹೋರಾಟ ಮಾಡುತ್ತಿದ್ದಾರೆ. ಎಲ್ಲರನ್ನೂ ಸರಿದೂಗಿಸಿಕೊಂಡು ಹೋಗುವಲ್ಲಿ ಸಿಎಂ ವಿಫಲರಾಗಿದ್ದಾರೆ. ಡಿಕೆಶಿ, ಬಿ.ಕೆ ಹರಿಪ್ರಸಾದ್, ಮಲ್ಲಿಕಾರ್ಜುನ ಖರ್ಗೆ ಮತ್ತು ಸಿದ್ದರಾಮಯ್ಯ ಹೀಗೆ ನಾಲ್ಕು ಪವರ್ ಸೆಂಟರ್ ನಡುವೆ ಕಾಂಗ್ರೆಸ್ ಒದ್ದಾಡುತ್ತಿದೆ. ಈ ಪವರ್ ಸೆಂಟರ್‌ ಗಳು ಶಿವಕುಮಾರ್ ಅವರ ನಿದ್ದೆಗೆಡಿಸುತ್ತವೆ ಎಂದರು.

ಜನರಿಗಾಗಿ, ಬಡವರಿಗಾಗಿ, ರೈತರಿಗಾಗಿ ಏನೂ ಒಳಿತು ಮಾಡಲು ಆಗದ ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಗಾಂಧಿ ಕುಟುಂಬಕ್ಕೆ ಮಾರುವ, ಅಡ ಇಡುವ ಹಾಗೂ ಬೊಕ್ಕಸದಿಂದ ಲೂಟಿ ಮಾಡುವ ಕೆಲಸವನ್ನು ಕಳೆದ ಮೂರು ವರ್ಷದಿಂದ ಮಾಡುತ್ತಾ ಇತ್ತು. ಅದು ಈಗ ಮುಂದುವರಿಯಲಿದೆ. ಅದಕ್ಕೆ ಬೇಕಾದ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರ ತೊಲಗಲಿ:

ಇಂದು ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಕೆ ಎಚ್ ಮುನಿಯಪ್ಪ, ಕೆ ಜೆ ಜಾರ್ಜ್ ಸಹ ತಮ್ಮ ಖಾತೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿಗಿಂತ ಇವರಿಗೆ ಅಧಿಕಾರದ ಹಪಾಹಪಿ ಹೆಚ್ಚಾಗಿದೆ. ಇದರಿಂದ ಬೇಸತ್ತ ಜನ ವಿಧಾನಸಭಾ ಚುನಾವಣೆ ಆಗಿ ದರಿದ್ರ ಕಾಂಗ್ರೆಸ್ ಸರ್ಕಾರ ತೊಲಗಬೇಕು ಎಂದು ಬಯಸಿದ್ದಾರೆ. ಕಾಂಗ್ರೆಸ್‍ನವರಿಗೆ ಮಾನ ಮರ್ಯಾದೆ ಇಲ್ಲ ಎಂದು ರಾಜ್ಯದ ಜನ ಮಾತನಾಡುತ್ತಿದ್ದಾರೆ ಎಂದರು. ಮುಖ್ಯಮಂತ್ರಿ ಶಿವಕುಮಾರ್ ಅವರಿಗೆ ಸಾಕಷ್ಟು ಅನುಭವ ಇದೆ. ಅವರು ಕಸದಿಂದ ರಸ ತೆಗೆಯುವ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಹಿರಿಯ ಸಚಿವರನ್ನು ಕಡೆಗಣಿಸಿದ್ದಾರೆ ಎಂಬ ಚರ್ಚೆ ಆರಂಭವಾಗಿದೆ. ಇದು ಸರ್ಕಾರಕ್ಕೆ ಗೌರವ ತರುವುದಿಲ್ಲ ಎಂದರು.

ಸೀನಿಯಾರಿಟಿ ಮತ್ತು ಸಿನ್ಸಿಯಾರಿಟಿಗೆ ಕಾಂಗ್ರೆಸ್‍ನಲ್ಲಿ ಬೆಲೆ ಇಲ್ಲ ಎಂದು ಮನಿಯಪ್ಪ ಅವರೇ ಹೇಳಿದ್ದಾರೆ. ಹೀಗೇ ಆದರೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಬರಲು ಸಾಧ್ಯವಿಲ್ಲ ಎಂದು ವಿವರಿಸಿದರು. ಕಾಂಗ್ರೆಸ್ ಆಂತರಿಕ ಕಚ್ಚಾಟದಿಂದ ಮಾತ್ರವೇ ಬಿಜೆಪಿ ಗೆಲುವು ಅಲ್ಲ. ಬಿಜೆಪಿಗೆ ತನ್ನದೇ ಆದ ವರ್ಚಸ್ಸು ಇದೆ. ನಮ್ಮಲ್ಲಿ ಕಾರ್ಯಕರ್ತರು ಕೆಲಸ ಮಾಡುತ್ತಾರೆ. ಮುಂದಿನ ಚುನಾವಣೆಯಲ್ಲಿ ನಮ್ಮದೇ ತಂತ್ರ ಇರಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

 

Share:



Author:

...

ಪ್ರತಿ ಕ್ಷಣದ ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದ ಸುದ್ದಿಗಳ ಸರಳ ನಿರೂಪಣೆ. ನೇರ, ನಿಷ್ಠುರ, ಸ್ಪಷ್ಟ ಮತ್ತು ನೈಜ ಸುದ್ದಿಗಳನ್ನುಒದಗಿಸುವುದರ ಜೊತೆಗೆ ಜಗತ್ತಿನಾದ್ಯಂತ ನಡೆಯುವ ವಿದ್ಯಮಾನಗಳ ಸಾಧಕ-ಬಾಧಕಗಳ ಕುರಿತು ಮಾಹಿತಿಗಳನ್ನು ಸಮಗ್ರವಾಗಿ ಒದಗಿಸುವ ಗುರಿಯನ್ನು ಕಳೆದ 10 ವರ್ಷಗಳಿಂದ ಸ್ಪೀಡ್‌ ನ್ಯೂಸ್‌ ಕನ್ನಡ ಹೊಂದಿದೆ.