ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಪಡೆಯಲೇಬೇಕೆಂಬ ಹಟಕ್ಕೆ ಬಿದ್ದಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಇದೀಗ ಅವರು ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದ್ದಾರೆ. ಸುಮಾರು 30 ನಿಮಿಷಗಳ ಕಾಲ ಚರ್ಚೆ ನಡೆದಿದ್ದು ಮಾತುಕತೆಯ ವಿವರಗಳು ಲಭ್ಯವಾಗಿಲ್ಲ.
ಕಳೆದ ರಾತ್ರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ಹಿಂದೆ ಆಗಿರುವ ಒಪ್ಪಂದದಂತೆ ಅಧಿಕಾರ ಹಸ್ತಾಂತರಕ್ಕೆ ಮನವಿ ಮಾಡಿಕೊಂಡಿದ್ದಾರೆ.
ಈ ಮಧ್ಯೆ ಶಿವಕುಮಾರ್ ಅವರ ಬೆಂಬಲಿಗ ಸಚಿವರು ಮತ್ತು ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ. ಸಚಿವರಾದ ಎನ್.ಚಲುವರಾಯಸ್ವಾಮಿ, ಹೆಚ್.ವಿ.ವೆಂಕಟೇಶ್ ಮತ್ತು ಶಾಸಕ ಕೆ.ಎಂ.ಶಿವಲಿಂಗೇಗೌಡ, ದೆಹಲಿಯಲ್ಲಿದ್ದಾರೆ.
ರಾಮನಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್ ಮಾತನಾಡಿ, ಈ ಬಾರಿ ಡಿ.ಕೆ.ಶಿವಕುಮಾರ್ ಅವರಿಗೆ ಅವಕಾಶ ಸಿಗುವ ವಿಶ್ವಾಸ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ್ಳೆಯ ಆಡಳಿತ ಕೊಟ್ಟಿದ್ದಾರೆ. ಡಿಕೆಶಿ ಅವರಿಗೂ ಅವಕಾಶ ಕೊಡಬೇಕು. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದಿದ್ದಾರೆ.