ಹೊಸೂರು: ತಮಿಳುನಾಡಿನ ಹೊಸೂರಿನಲ್ಲಿ ಕುಡಿದ ಮತ್ತಿನಲ್ಲಿ ಕಾಲೇಜು ವಿದ್ಯಾರ್ಥಿಗಳು ಸರ್ಕಾರಿ ಉದ್ಯೋಗಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲೆ ಮಾಡಿರುವ ಭೀಕರ ಘಟನೆ ವರದಿಯಾಗಿದೆ. ಹೊಸೂರು ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆದಿತ್ಯ (20), ರಿತಿಕ್ ಕುಮಾರ್ (19) ಮತ್ತು ಹರೀಶ್ (19) ಬಂಧಿತರು. ಇವರೆಲ್ಲರೂ ಕಾಲೇಜು ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ.
ಇವರು ಸಹಾಯಕ ಕಾರ್ಮಿಕ ಇನ್ ಸ್ಪೆಕ್ಟರ್ ಶಿವಮೂರ್ತಿ (54) ಎಂಬುವರ ಮೇಲೆ ಕಾರು ಹರಿಸಿ ಕೊಲೆ ಮಾಡಿದ್ದಾರೆ.
ಶಿವಮೂರ್ತಿ ಹೊಸೂರಿನ ಅಣ್ಣೈ ಅರವಿಂದ್ ನಗರದ ನಿವಾಸಿ. ಮನೆ ಮುಂದೆ ಬೈಕ್ ನಿಲ್ಲಿಸಿದ್ದರು. ಬೈಕ್ ಗೆ ಕಾರಿನಲ್ಲಿ ಬಂದ ವಿದ್ಯಾರ್ಥಿಗಳು ಡಿಕ್ಕಿ ಹೊಡೆದಿದ್ದಾರೆ. ಇದನ್ನು ಶಿವಮೂರ್ತಿ ಮತ್ತು ಕುಟುಂಬದವರು ಪ್ರಶ್ನಿಸಿದ್ದಾರೆ. ನಂತರ ಬಳಿಕ ಪರಸ್ಪರ ವಾಗ್ವಾದ ನಡೆದಿದೆ. ಇದರಿಂದ ರೊಚ್ಚಿಗೆದ್ದ ವಿದ್ಯಾರ್ಥಿಗಳು ಕಾರನ್ನು ಚಲಾಯಿಸಿ ಶಿವಮೂರ್ತಿ ಮೇಲೆ ಹರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಿವಮೂರ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಶಿವಮೂರ್ತಿ ಅವರ ಮಗ, ಸೊಸೆ ಮತ್ತು ಮೊಮ್ಮಗ ಗಾಯಗೊಂಡಿದ್ದು, ಅವರನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.