ಬೆಂಗಳೂರು: ಮೀಸಲಾತಿ, ಒಳ ಮೀಸಲಾತಿಯನ್ನು ಸರಿಯಾದ ರೀತಿಯಲ್ಲಿ ಅನುಷ್ಠಾನ ಗೊಳಿಸದ ರಾಜ್ಯ ಸರ್ಕಾರದ ವಿರುದ್ಧ ಉಗ್ರ ಹೋರಾಟ ಮಾಡುವುದಾಗಿ ಬಿಜೆಪಿ ಮುಖಂಡ ಮಾಜಿ ಸಚಿವ ಬಿ ಶ್ರೀರಾಮುಲು ಎಚ್ಚರಿಕೆ ನೀಡಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮೀಸಲಾತಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಹಕ್ಕು. ಅವರು ಎಸ್ಸಿ., ಎಸ್ಟಿ ಹಾಗೂ ಹಿಂದುಳಿದ ವರ್ಗಕ್ಕೆ ಶೇ 50 ಮೀಸಲು ನೀಡಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧಿಕಾರಾವಧಿಯಲ್ಲಿ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು ಎಂದು ತೀರ್ಮಾನ ಮಾಡಲಾಗಿತ್ತು.
ಆದರೆ ಕಾಂಗ್ರಸ್ ಸರ್ಕಾರ ಉದ್ಯೋಗಕಾಂಕ್ಷಿಗಳ ಬೇಡಿಕೆಯನ್ನು ಪರಿಗಣಿಸಲಿಲ್ಲ. ಈಗ 50 ಸಾವಿರ ಹುದ್ದೆ ಭರ್ತಿ ಮಾಡುತ್ತೇವೆ ಎಂದು ಸರ್ಕಾರ ಹೇಳುತ್ತಿದೆ. ಈಗ ಬಂದಿರುವುದು ತಾತ್ಕಾಲಿಕ ತಡೆ. ಇದಕ್ಕೆ ಸರ್ಕಾರ ಏಕೆ ಹೆದರಬೇಕು ಎಂದು ಪ್ರಶ್ನಿಸಿದರು. ಸರ್ಕಾರದ ಅನ್ಯಾಯವನ್ನು ಖಂಡಿಸಿ ಬಿಜೆಪಿ ಹೋರಾಟ ನಡೆಸಲಿದೆ. ಪಕ್ಷದ ಎಲ್ಲಾ ಸಂಸದರು, ಶಾಸಕರು, ಮಾಜಿ ಸಚಿವರು ಈ ಕುರಿತು ತೀರ್ಮಾನ ಕೈಗೊಂಡಿದ್ದೇವೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ವಿಧಾನಪರಿಷತ್ ಸದಸ್ಯೆ ಶ್ರೀಮತಿ ಹೇಮಲತಾ ನಾಯಕ್, ಎಸ್ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಉಪಸ್ಥಿತರಿದ್ದರು.