ಬೆಂಗಳೂರು: ಬೆಂಗಳೂರಿನ ಜನನಿಬಿಡ ಪ್ರದೇಶವಾದ ಚಿಕ್ಕಪೇಟೆಯ ರಾಜಾ ಮಾರ್ಕೇಟ್ ಹಿಂಭಾಗದಲ್ಲಿರುವ ಕುಂಬಾರಪೇಟೆಯಲ್ಲಿ ಇಂದು ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಲಕ್ಷ್ಮಿ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿನ ಸ್ಟೇಷನರಿ ಸಾಮಗ್ರಿ ಮಾರಾಟ ಮಾಡುವ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಂದು ಬೆಳಗ್ಗೆ ಬೆಂಕಿ ಕಾಣಿಸಿಕೊಂಡಿದೆ. ನೋಡುನೋಡುತ್ತಿದ್ದಂತೆ ಡು ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಟ್ಟಡಕ್ಕೆ ಆವರಿಸಿದೆ. ಮೊದಲ ಹಾಗೂ ಎರಡು ಅಂತಸ್ತಿನಲ್ಲಿನ ಹಲವು ಅಂಗಡಿಗಳಿಗೆ ಬೆಂಕಿ ಹರಡಿದ್ದು, ಕೋಟ್ಯಾಂತರ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಈವರೆಗಿನ ಮಾಹಿತಿ ಪ್ರಕಾರ ಬೆಳಗ್ಗೆಯಿಂದ ಎಂಟು ಅಗ್ನಿಶಾಮಕ ವಾಹನಗಳು ಆಗಮಿಸಿ, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿವೆ. ಆದರೂ ಬೆಂಕಿ ನಿಯಂತ್ರಣಕ್ಕೆ ಬಂದಿಲ್ಲ. ಈ ಕಟ್ಟಡದಲ್ಲಿ 175 ಅಂಗಡಿಗಳಿದ್ದು ಎಲ್ಲವೂ ಸುಟ್ಟಿವೆ ಎಂಬ ಮಾಹಿತಿ ಲಭ್ಯವಾಗಿದೆ.
ಮೂರು ಅಂತಸ್ತಿನ ಈ ಕಟ್ಟಡದ ಗೋದಾಮಿನಲ್ಲಿ ಪ್ಲಾಸ್ಟಿಕ್ ಪೈಪ್ಗಳು ಹಾಗೂ ಇತರೆ ಹಾರ್ಡ್ವೇರ್ ವಸ್ತುಗಳನ್ನು ಸಂಗ್ರಹಿಸಿಡಲಾಗಿತ್ತು. ಪ್ಲಾಸ್ಟಿಕ್ ವಸ್ತುಗಳಿಗೆ ಬೆಂಕಿ ತಗುಲಿದ ಕಾರಣ ಇಡೀ ಪ್ರದೇಶದಲ್ಲಿ ದಟ್ಟವಾದ ಕಪ್ಪು ಹೊಗೆ ಆವರಿಸಿಕೊಂಡಿದೆ. ಇದರಿಂದ ಸ್ಥಳೀಯರು ಉಸಿರಾಟದ ತೊಂದರೆ ಅನುಭವಿಸಬೇಕಾಯಿತು.
ಮೊದಲ ಹಾಗೂ ಎರಡನೇ ಅಂತಸ್ತಿನಲ್ಲಿನ ಬಹುತೇಕ ಅಂಗಡಿಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿವೆ. ಚಿನ್ನ, ಬೆಳ್ಳಿ ಆಭರಣಗಳನ್ನು ಮಾರಾಟ ಮಾಡುವ ರಾಜಾ ಮಾರ್ಕೆಟ್ ಸಮೀಪವೇ ಈ ಕಾಂಪ್ಲೆಕ್ಸ್ ಇದ್ದು, ಚಿನ್ನಾಭರಣ ಮಳಿಗೆಗಳ ಮಾಲೀಕರು ಆತಂಕಕ್ಕೀಡಾಗಿದ್ದಾರೆ.
ಈ ಪ್ರದೇಶ ಕಿರಿದಾಗಿದ್ದು ವಾಹನಗಳ ಸಂಚಾರಕ್ಕೆ ತೊಡಕಾಗಿದೆ.