ತಮಿಳುನಾಡು ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದ್ದಂತೆ, ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಆದರೆ ಎಲ್ಲರ ಗಮನ ಸೆಳೆದಿದ್ದ ಅಣ್ಣಾಮಲೈ ಹೆಸರು ಪಟ್ಟಿಯಲ್ಲಿ ಇಲ್ಲದಿರುವುದು ಭಾರಿ ಚರ್ಚೆಗೆ ಕಾರಣವಾಗಿತ್ತು. ಅಣ್ಣಾಮಲೈ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆಯೇ ಎಂಬ ಪ್ರಶ್ನೆಗೆ ಈಗ ಸ್ವತಃ ಅಣ್ಣಾಮಲೈ ಅವರೇ ತೆರೆ ಎಳೆದಿದ್ದಾರೆ. ತಾನು ಯಾವುದೇ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮೊದಲೇ ಪಕ್ಷದ ಕೋರ್ ಕಮಿಟಿಗೆ ಲಿಖಿತವಾಗಿ ತಿಳಿಸಿರುವುದಾಗಿ ಅಣ್ಣಾಮಲೈ ಸ್ಪಷ್ಟಪಡಿಸಿದ್ದಾರೆ. ಹೀಗಾಗಿ ಇದು ಟಿಕೆಟ್ ನಿರಾಕರಣೆಯಲ್ಲ, ತಮ್ಮ ಸ್ವಯಂ ನಿರ್ಧಾರ ಎಂದು ಹೇಳಿದ್ದಾರೆ.
ಕೇವಲ ಒಂದು ಕ್ಷೇತ್ರಕ್ಕೆ ಸೀಮಿತವಾಗುವ ಬದಲು, ರಾಜ್ಯದಾದ್ಯಂತ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿ 210 ಸ್ಥಾನಗಳನ್ನು ಗೆಲ್ಲಿಸುವ ಗುರಿ ಹೊಂದಿರುವುದಾಗಿ ತಿಳಿಸಿದ್ದಾರೆ.ಕೇಂದ್ರ ಸಚಿವ ಪಿಯೂಷ್ ಗೋಯಲ್ ಕೂಡ ಅಣ್ಣಾಮಲೈ ಅವರ ನಿರ್ಧಾರವನ್ನು ಶ್ಲಾಘಿಸಿದ್ದು, ಅಣ್ಣಾಮಲೈ ಒಬ್ಬ ಸಮರ್ಪಿತ ಕಾರ್ಯಕರ್ತ, ಅವರು ಪಕ್ಷದ ಗೆಲುವಿಗಾಗಿ ರಾಜ್ಯಾದ್ಯಂತ ಶ್ರಮಿಸಲು ನಿರ್ಧರಿಸಿದ್ದಾರೆ ಎಂದಿದ್ದಾರೆ.
ತಮಿಳುನಾಡಿನಲ್ಲಿ ಏಪ್ರಿಲ್ 23 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಕೊಯಮತ್ತೂರಿನಲ್ಲಿ ಸೋಲುಂಡಿದ್ದ ಅಣ್ಣಾಮಲೈ, ಈ ಬಾರಿ ಚುನಾವಣಾ ಕಣಕ್ಕಿಳಿಯುವ ಬದಲು ಪಕ್ಷದ ಸಂಘಟನೆ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವಿಗೆ ಹೆಗಲು ಕೊಡಲು ನಿರ್ಧರಿಸಿದ್ದಾರೆ. ಇದು ತಮಿಳುನಾಡಿನಲ್ಲಿ ಬಿಜೆಪಿ ಅಸ್ತಿತ್ವವನ್ನು ಗಟ್ಟಿಗೊಳಿಸುವ ಅವರ ಕಾರ್ಯತಂತ್ರದ ಭಾಗ ಎನ್ನಲಾಗುತ್ತಿದೆ.