ಬೆಂಗಳೂರು:ನಗರದ ಕನಕಪುರ ರಸ್ತೆಯ ಆರ್ಟ್ ಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಭಾವಹಿಸಲು ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಪ್ರಯಣಿಸಿದ್ದ ರಸ್ತೆಯಲ್ಲಿ ಜಿಲೆಟಿನ್ ಕಡ್ಡಿಗಳು ಕಂಡು ಬಂದಿರುವ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ.
ಬೆಂಗಳೂರು ದಕ್ಷಿಣ ತಾ. ವಡೇರಹಳ್ಳಿ ಗೇಟ್ ಬಳಿ ಬಾಕ್ಸ್ ಒಂದು ಪತ್ತೆಯಾಗಿತ್ತು. ಅದರೊಳಗೆ ಜಿಲೆಟಿನ್ ಕಡ್ಡಿ, ಬೆಂಕಿಕಡ್ಡಿ ಇಡಲಾಗಿತ್ತು. ಪೊಲೀಸರು ಬಾಕ್ಸ್ ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಇಂಚಿಂಚೂ ತಪಾಸಣೆ ನಡೆಸಲಾಗುತ್ತಿದೆ. ಪ್ರಕರಣ ಭೇದಿಸಲು ಆರು ವಿಶೇಷ ತಂಡಗಳ ರಚನೆ ಮಾಡಲಾಗಿದೆ.
ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. RAW, ಕೇಂದ್ರ ಗುಪ್ತಚರ, NSG. ತಂಡಗಳೂ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿವೆ. ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯ ವಡೇರಹಳ್ಳಿ ಸೇತುವೆಯ ಬಳಿ ಭಾನುವಾರ ಬೆಳಿಗ್ಗೆ 10.30ರ ಸುಮಾರಿಗೆ ಪರಿಶೀಲನೆ ನಡೆಸುತ್ತಿರುವಾಗ ಎರಡು ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿದ್ದವು.
ಇದಕ್ಕೂ ಮುನ್ನ ಬೆಳಿಗ್ಗೆ 7.30ರ ಸುಮಾರಿಗೆ ವ್ಯಕ್ತಿಯೊಬ್ಬ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಎಚ್ಎಎಲ್ ಹಾಗೂ ಆರ್ಟ್ ಆಫ್ ಲಿವಿಂಗ್ ಬಳಿ ಸ್ಫೋಟ ನಡೆಸುವುದಾಗಿ ಬೆದರಿಕೆ ಒಡ್ಡಿದ್ದ. ಕೂಡಲೇ ಕೋರಮಂಗಲ ಠಾಣೆಯ ಪೊಲೀಸರು, ಸಿಸಿಬಿ ಪೊಲೀಸರ ಜತೆಗೆ ಜಂಟಿ ಕಾರ್ಯಾಚರಣೆ ನಡೆಸಿ ಬೆದರಿಕೆ ಹಾಕಿದ್ದ ಲೋಹಿತ್ (40) ಎಂಬಾತನನ್ನು ಬಂಧಿಸಿ ವಿಚಾರಣೆ ನಡೆಸಿದ್ದರು.
ಹಿಂದೆಯೂ ಗಣ್ಯರು ನಗರಕ್ಕೆ ಬಂದಾಗ ಈತ ಇದೇ ರೀತಿಯಲ್ಲಿ ಬೆದರಿಕೆ ಕರೆ ಮಾಡಿದ್ದ. ಆತನ ಮಾನಸಿಕ ಆರೋಗ್ಯ ಸ್ಥಿತಿ ಸರಿ ಇಲ್ಲ ಎಂದು ಆತನ ಕುಟುಂಬದವರು ಹೇಳುತ್ತಿದ್ದಾರೆ.
ಘಟನಾ ಸ್ಥಳದಲ್ಲಿ ಕ್ಯಾಮೆರಾ ಇಲ್ಲದಿರುವುದು ಪ್ರಮುಖ ಸಮಸ್ಯೆಯಾಗಿದೆ. ಆದರೂ ಆ ರಸ್ತೆಯ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಜಾಲಾಡುತ್ತಿದ್ದಾರೆ. ಕಗ್ಗಲಿಪುರ ಠಾಣೆ ಪೊಲೀಸರು ಮತ್ತು ಎನ್ಐಎ ತಂಡ ಜಂಟಿಯಾಗಿ ಅನುಮಾನಾಸ್ಪದ ವ್ಯಕ್ತಿಗಳ ಚಲನವಲನದ ಮೇಲೆ ನಿಗಾ ಇಟ್ಟಿವೆ. ಅಂತರರಾಜ್ಯದ ನಂಟು ಇದೆಯೇ ಎಂಬ ನಿಟ್ಟಿನಲ್ಲಿ ‘ರಾ’ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅತ್ಯಂತ ಬಿಗಿ ಭದ್ರತೆಯ ನಡುವೆಯೂ ಇಂತಹ ಭದ್ರತಾ ಲೋಪ ಸಂಭವಿಸಿರುವುದು ಕೇಂದ್ರ ಮತ್ತು ರಾಜ್ಯದ ಭದ್ರತಾ ಏಜೆನ್ಸಿಗಳಲ್ಲಿ ಆತಂಕ ಮೂಡಿಸಿದ್ದು, ಆರೋಪಿಗಳ ಪತ್ತೆಗಾಗಿ ವ್ಯಾಪಕ ಬಲೆ ಬೀಸಲಾಗಿದೆ.