ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರ ಮುಷ್ಕರಕ್ಕೆ ಹೈಕೋರ್ಟ್ ತಡೆ ನೀಡಿದೆ. ಈ ಮೂಲಕ ನಾಳೆಯಿಂದ ಮುಷ್ಕರ ನಡೆಸಲು ಮುಂದಾಗಿದ್ದ ಸಾರಿಗೆ ನೌಕರರಿಗೆ ಹೈಕೋರ್ಟ್ ಬಿಗ್ ಶಾಕ್ ನೀಡಿದೆ. ಸರ್ಕಾರ ಮಾತುಕತೆ ನಡೆಸಲು ಮುಂದಾಗಬೇಕು ಎಂದೂ ಸೂಚನೆ ನೀಡಿ ಸರ್ಕಾರ ಮತ್ತು ಸಾರಿಗೆ ನೌಕರರ ಸಂಸ್ಥೆಗಳಿಗೆ ನೋಟಿಸ್ ನೀಡಿದೆ.
ಸಾರಿಗೆ ನೌಕರರ ಮುಷ್ಕರ ಕುರಿತು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು (ಪಿಐಎಲ್) ಸಲ್ಲಿಕೆಯಾಗಿದ್ದವು. ಇಂದು ಈ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿಗಳಾದ ಸೂರಜ್ ಗೋವಿಂದರಾಜ್ ಮತ್ತು ಮನ್ಮಥ ರಾವ್ ಅವರ ಪೀಠದಲ್ಲಿ ನಡೆಯಿತು. ನಂತರ ವಿಚಾರಣೆ ಗುರುವಾರಕ್ಕೆ ಮುಂದೂಡಿತು. ಹೀಗಾಗಿ ನಾಳೆ ಹಮ್ಮಿಕೊಂಡಿದ್ದ ಮುಷ್ಕರ ಮುಂದೂಡಿಕೆಯಾಗಿದೆ.
ಈ ಮಧ್ಯೆ ಮುಷ್ಕರದಿಂದ ಹಿಂದೆ ಸರಿಯಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಸಂಘ ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷ ಕೆ.ಆರ್ ಜಗದೀಶ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ.