ಢಾಕಾ: ಗಡಿ ರಾಜ್ಯವಾದ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಅಲ್ಲಿಂದ ಅಕ್ರಮ ವಲಸಿಗರನ್ನು ಬಾಂಗ್ಲಾದೇಶಕ್ಕೆ ದಬ್ಬುವುದಿಲ್ಲ ಎಂದು ಬಾಂಗ್ಲಾದೇಶದ ಗೃಹ ಸಚಿವ ಸಲಾಹುದ್ದೀನ್ ಅಹ್ಮದ್ ಇಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮ ವಲಸಿಗರನ್ನು ಪಶ್ಚಿಮಬಂಗಾಳದಿಂದ ಬಲವಂತವಾಗಿ ಹೊರದಬ್ಬುವುದಿಲ್ಲ ಎಂದು ನಾನು ಭಾವಿಸಿದ್ದೇನೆ. ಆದರೂ ಗಡಿಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಗಡಿ ಭದ್ರತಾ ಪಡೆಗೆ ಸೂಚಿಸಿದ್ದೇನೆ ಎಂದು ತಿಳಿಸಿದರು. ಬಂಗಾಳದಲ್ಲಿ ಸರ್ಕಾರ ಬದಲಾಗಿದ್ದು, ಅಕ್ರಮ ವಲಸಿಗರು ಎಂದು ಅಲ್ಲಿನ ನಿವಾಸಿಗಳನ್ನು ಬಾಂಗ್ಲಾದೇಶಕ್ಕೆ ದಬ್ಬಿದರೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ವಿದೇಶಾಂಗ ಸಚಿವ ಖಲೀಲ್ ಉರ್ ರೆಹಮಾನ್ ಅವರು ಹೇಳಿಕೆ ನೀಡಿದ ಮರುದಿನವೇ ಗೃಹ ಸಚಿವರು ಈ ಹೇಳಿಕೆ ನೀಡಿದ್ದಾರೆ.