injustice to st in reservation; fight against government; r ashok| ಎಸ್ಟಿಗೆ ಮೀಸಲಾತಿಯಲ್ಲಿ ಅನ್ಯಾಯ; ಕಾಂಗ್ರೆಸ್ ಸರ್ಕಾರದ ವಿರುದ್ದ ಉಗ್ರ ಹೋರಾಟ: ಆರ್.ಅಶೋಕ್ ಎಚ್ಚರಿಕೆ | Speed News Kannada
5
2026-05-13 14:56:36
injustice to st in reservation; fight against government; r ashok| ಎಸ್ಟಿಗೆ ಮೀಸಲಾತಿಯಲ್ಲಿ ಅನ್ಯಾಯ; ಕಾಂಗ್ರೆಸ್ ಸರ್ಕಾರದ ವಿರುದ್ದ ಉಗ್ರ ಹೋರಾಟ: ಆರ್.ಅಶೋಕ್ ಎಚ್ಚರಿಕೆ | Speed News Kannada
ಬೆಂಗಳೂರು: ಮೀಸಲಾತಿ ಪ್ರಮಾಣ ಕಡಿತ ಮಾಡಿ ಎಸ್ಟಿ ಸಮುದಾಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದೊಡ್ಡ ಅನ್ಯಾಯ ಮಾಡಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಆಪಾದಿಸಿದ್ದಾರೆ.
ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರಕಾರವು ಎಸ್ಸಿ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ ಮತ್ತು ಎಸ್ಟಿ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಿತ್ತು. ಎಸ್ಟಿ ಸಮುದಾಯಕ್ಕೆ ನ್ಯಾಯಯುತ ಬೇಡಿಕೆಯನ್ನು ನಾವು ಈಡೇರಿಸಿದ್ದೆವು ಎಂದರು.
ಆದರೆ ಕಾಂಗ್ರೆಸ್ ಸರಕಾರದ ಕ್ರಮದಿಂದ ಎಸ್ಟಿ ಸಮುದಾಯಕ್ಕೆ ಅನ್ಯಾಯವಾಗಿದೆ. ಮೀಸಲಾತಿ ಪ್ರಮಾಣವನ್ನು ಕಡಿಮೆ ಮಾಡಿದ್ದಾರೆ. ನಿಮ್ಮ ದಲಿತಪರ ನೀತಿ ಎಂದರೆ ಇದೇನಾ ಎಂದು ಪ್ರಶ್ನಿಸಿ ಹಿಂದೆ 10 ವರ್ಷ ಮನಮೋಹನ್ ಸಿಂಗ್ ಸರಕಾರ ಇದ್ದಾಗ ಮೀಸಲಾತಿ ಪ್ರಮಾಣವನ್ನು ಏಕೆ ಹೆಚ್ಚಿಸಿರಲಿಲ್ಲ ಎಂದು ಕೇಳಿದರು.
ಕಾಂಗ್ರೆಸ್ ಸರ್ಕಾರ ಮೀಸಲಾತಿ ಪ್ರಮಾಣ ಕಡಿತ ಮಾಡಿ ಎಸ್ಟಿಗಳಿಗೆ ಅವಮಾನ ಮಾಡಿದೆ. ದಲಿತರ ಬೆನ್ನಿಗೆ ಇವರು ಚೂರಿ ಹಾಕಿದ್ದಾರೆ. ಈಗ ಎಸ್ಟಿ ಸಮುದಾಯ ನ್ಯಾಯ ಕೇಳುತ್ತಿದೆ. ಇನ್ನೆಷ್ಟು ವರ್ಷ ಹೋರಾಟ ಮಾಡಬೇಕು? ಎಸ್ ಟಿ ಮೀಸಲಾತಿಯನ್ನು ಕೂಡಲೇ ಹೆಚ್ಚಿಸಬೇಕು. ಇದನ್ನು ಸರಿಪಡಿಸದೇ ಇದ್ದರೆ ನಿಮ್ಮ ಸರಕಾರವನ್ನು ಕಿತ್ತೆಸೆಯುವ ತೀರ್ಮಾನವನ್ನು ಎಸ್ ಟಿ ಸಮುದಾಯ ಮಾಡಲಿದೆ. ಬಿಜೆಪಿಯೂ ಅವರ ಹೋರಾಟಕ್ಕೆ ಬೆಂಬಲ ಕೊಡಲಿದೆ ಎಚ್ಚರಿಸಿದರು.
ದಲಿತರ ಕಣ್ಣಿಗೆ ಮಣ್ಣೆರಚುವ ಕೆಲಸ ಸರಿಯೇ- ರಾಜುಗೌಡ ನಾಯಕ್
ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜುಗೌಡ ನಾಯಕ್ ಮಾತನಾಡಿ, ಕಾಂಗ್ರೆಸ್ ಸರಕಾರ ನ್ಯಾಯಾಲಯಕ್ಕೆ ಸಮರ್ಪಕ ಮಾಹಿತಿ ಕೊಟ್ಟಿಲ್ಲ. ತಜ್ಞ ವಕೀಲರನ್ನು ನೇಮಿಸಿಲ್ಲ. ಇದರಿಂದ ಕೋರ್ಟಿನಲ್ಲಿ ತಡೆಯಾಜ್ಞೆ ಸಿಗುವಂತಾಗಿದೆ ಎಂದು ಆರೋಪಿಸಿದರು. ಸಿದ್ದರಾಮಯ್ಯನವರೇ, ದಲಿತರ ಕಣ್ಣಿಗೆ ಮಣ್ಣೆರಚುವ ಕೆಲಸ ಸರಿಯೇ ಎಂದು ಕೇಳಿದರು.
ಛತ್ತೀಸಗಡದಲ್ಲಿ ಎಸ್ಟಿಗೆ ಶೇ. 32, ಎಸ್ಸಿ ಗೆ ಶೇ. 10, ಒಬಿಸಿಗೆ ಶೇ. 16 ಸೇರಿ ಒಟ್ಟು ಶೇ 58 ಮೀಸಲಾತಿ ಕೊಡಲಾಗಿದೆ. ಅಲ್ಲಿ ಎಸ್ಸಿ, ಎಸ್ಟಿಗೆ ಜನಸಂಖ್ಯೆ ಆಧಾರದಲ್ಲಿ ಶೇ 50ಕ್ಕಿಂತ ಹೆಚ್ಚಾದರೂ ಕೊಡಿ ಎಂದಿದ್ದಾರೆ. ಹಾಗಿದ್ದರೆ ಕರ್ನಾಟಕದಲ್ಲಿ ಯಾಕೆ ಕೊಡಲಾಗುತ್ತಿಲ್ಲ ಎಂದು ಪ್ರಶ್ನಿಸಿದರು.
ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ತಿನ ವಿಪಕ್ಷ ಮುಖ್ಯ ಸಚೇತಕ ಎನ್.ರವಿಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜುಗೌಡ ನಾಯಕ್, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸದಾಸ ಕರಿಯಪ್ಪ ಭಾಗವಹಿಸಿದ್ದರು.
ಪತ್ರಿಕೋದ್ಯಮದಲ್ಲಿ ಮೂರು ದಶಕಗಳ ಅನುಭವ ಹೊಂದಿದ್ದು, ದೃಶ್ಯ ಮತ್ತು ಮುದ್ರಣ ಮಾಧ್ಯಮದಲ್ಲಿ ಪರಿಣಿತಿ ಪಡೆದಿದ್ದಾರೆ. ರಾಜಕೀಯ, ದೇಶ, ಅಂತಾರಾಷ್ಟ್ರೀಯ ವಿದ್ಯಾಮಾನಗಳಲ್ಲಿ ವಿಶೇಷ ಆಸಕ್ತಿ. ರಾಜಕೀಯ ವರದಿಗಾರಿಕೆಯಲ್ಲಿ ಪಳಗಿರುವ ಇವರು ಕುಳಿತಲ್ಲೇ ಸುದ್ದಿಯನ್ನು ಹೆಕ್ಕಿ ತೆಗೆಯಬಲ್ಲ ಛಾತಿ ಹೊಂದಿದ್ದಾರೆ. ಸಾಹಿತ್ಯ ವಿದ್ಯಾರ್ಥಿಯಾದ ಇವರು ಕನ್ನಡ ಮತ್ತು ಇಂಗ್ಲೀಷ್ ಸಾಹಿತ್ಯದ ವಿದ್ಯಾರ್ಥಿಯಾದ ಇವರು ಉತ್ತಮ ಓದುಗರೂ ಹೌದು.