ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು ಅನುಮತಿ ಸಿಗುವ ದಟ್ಟ ಸಾಧ್ಯತೆಗಳಿವೆ.
ಈ ಸಂಬಂಧ ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರು, ನ್ಯಾಯಮೂರ್ತಿ ಮೈಕೆಲ್ ಕುನ್ಹಾ ಅವರ ಆಯೋಗದ ವರದಿ ಆಧರಿಸಿ ಯಾವೆಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂಬುದನ್ನು ಪರಿಶೀಲಿಸಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿ ನಡೆಸಲು ಅನುಮತಿ ನೀಡಲಾಗುವುದು ಎಂದರು.
ನ್ಯಾಯಮೂರ್ತಿ ಕುನ್ಹಾ ವರದಿ ಆಧರಿಸಿ ಅಲ್ಪಾವಧಿ, ಮಧ್ಯಮಾವಧಿ ಮತ್ತು ದೀರ್ಘಾವಧಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳು ಎಂದು ಮೂರು ಭಾಗ ಮಾಡಲಾಗಿದೆ. ಮೊದಲ ಹಂತದಲ್ಲಿ ಕಿರು ಅವಧಿಯ ಕ್ರಮ ಕೈಗೊಳ್ಳಬೇಕಿತ್ತು. ಅದನ್ನು ಪರಿಶೀಲಿಸಲು ಗ್ರೇಟರ್ ಬೆಂಗಳೂರು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಮತ್ತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು. ಈ ಸಮಿತಿ ಈಗಾಗಲೇ ಎರಡು ಬಾರಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲಿಸಿದೆ. ದೀರ್ಘಾವಧಿಯ ಕ್ರಮಗಳನ್ನೂಈ ಕೂಡಲೇ ಈಡೇರಿಸಲು ಅದು ಕಷ್ಟ ಸಾಧ್ಯ. ಅಲ್ಪಕಾಲಿಕ ಕ್ರಮಗಳು ತೃಪ್ತಿಕರವಾಗಿದ್ದರೆ ಐಪಿಎಲ್ ಪಂದ್ಯಾವಳಿಗಳಿಗೆ ಅವಕಾಶ ನೀಡುವುದಾಗಿ ತಿಳಿಸಿದರು.
ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಬೈರತಿ ಬಸವರಾಜು ಅವರ ಅರ್ಜಿಗೆ ನ್ಯಾಯಾಲಯ ನಿರೀಕ್ಷಣಾ ಜಾಮೀನಿ ನಿರಾಕರಿಸಿ ಎರಡು ದಿನಗಳಾಗಿವೆ. ಅವರನ್ನು ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತದೆ. ಅವರಾಗಿಯೇ ಬಂದು ಶರಣಾದರೆ ಒಳ್ಳೆಯದು ಇಲ್ಲವಾದರೆ, ಪೊಲೀಸರು ಬಂಧಿಸಿ ಕರೆ ತರುತ್ತಾರೆ ಎಂದು ಹೇಳಿದರು.