ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಬಹಿರಂಗವಾಗಿ ಪದೇ ಪದೇ ಮಾತನಾಡುವುದು ಸೂಕ್ತವಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಗಳಿಗೆ ಸಂಬಂಧಪಟ್ಟಂತೆ ಎರಡೂ ಪಕ್ಷಗಳ ಮುಖಂಡರು ಹೊಂದಾಣಿಕೆ ಕುರಿತು ತೀರ್ಮಾನ ಮಾಡುತ್ತಾರೆ ಎಂದರು.
ಎರಡೂ ಪಕ್ಷಗಳು ಒಗ್ಗಟ್ಟಿನಿಂದ 2028ರ ವಿಧಾನಸಭೆ ಚುನಾವಣೆ ಎದುರಿಸಿದಲ್ಲಿ 140ರಿಂದ 150 ಕ್ಷೇತ್ರಗಳಲ್ಲಿ ಗೆಲ್ಲಬಹುದು. ಪದೇ ಪದೇ ಮೈತ್ರಿ ಬಗ್ಗೆ ಮಾತನಾಡುವುದು ಯಾರಿಗೂ ಸೂಕ್ತವಲ್ಲ. ಒಗ್ಗಟ್ಟಿನ ತೀರ್ಮಾನವಾಗಬೇಕು ಎಂದರು.
ಜೆಡಿಎಸ್ ಪಕ್ಷ ಒಕ್ಕಲಿಗರ ಪಕ್ಷ ಎನ್ನುವುದು ಸರಿಯಲ್ಲ. ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಮತ್ತು ಎಂ.ಪಿ.ಪ್ರಕಾಶ್ ಅವರನ್ನು ಉಪಮುಖ್ಯಮಂತ್ರಿಗಳನ್ನಾಗಿ ಮಾಡಿದ್ದರು ಎಂದು ಹೇಳಿದರು.
ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರುವ ವಿಷಯಕ್ಕೆ ಪ್ರತಿಕ್ರಿಯಿಸಿದ ಅವರು, ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದರು. ಅದರ ಸುವರ್ಣ ಮಹೋತ್ಸವದ ಆಚರಣೆಯನ್ನು ಕಾಂಗ್ರೆಸ್ನವರು ಮಾಡುತ್ತಿರಬಹುದೆಂಬ ಭಾವನೆ ಮೂಡಿದೆ. ತುರ್ತು ಪರಿಸ್ಥಿತಿ 2.0 ಘೋಷಣೆ ಮಾಡಲಿ ಎಂದು ಮುಂದಾಗಿದ್ದಾರೆ ಎಂದು ವ್ಯಂಗ್ಯವಾಡಿದರು.