ಬೆಂಗಳೂರು: ಕಾಡುಗೊಲ್ಲರ ಸಂಘದ ರಾಜ್ಯ ಅಧ್ಯಕ್ಷ ರಾಜಣ್ಣ ಅವರು ಅವರ ಬೆಂಬಲಿಗರೊಂದಿಗೆ ಇಂದು ಕಾಂಗ್ರೆಸ್ನಿಂದ ಬಿಜೆಪಿಗೆ ಸೇರ್ಪಡೆಯಾದರು.
ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಈ ಸಂದರ್ಭದಲ್ಲಿ ಮಾತನಾಡಿ, ಬಿಜೆಪಿ ತತ್ವ, ಸಿದ್ಧಾಂತಗಳನ್ನು ಒಪ್ಪಿಕೊಂಡು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸಿ ರಾಜಣ್ಣ ಅವರು ಬಿಜೆಪಿ ಸೇರಿದ್ದಾರೆ. ರಾಜ್ಯದಲ್ಲಿ ಬಿಜೆಪಿಗೆ ಬಲ ತುಂಬುವ ಅಪೇಕ್ಷೆ ಹೊಂದಿ, ಯಾವುದೇ ನಿರೀಕ್ಷೆಗಳಿಲ್ಲದೇ ಸೇರಿದ್ದಾರೆ. ರಾಜ್ಯದ ಅಧ್ಯಕ್ಷನಾಗಿ ಅವರನ್ನು ತಮ್ಮೆಲ್ಲರ ಪರವಾಗಿ ಸ್ವಾಗತಿಸುತ್ತೇನೆ ಎಂದರು.
ವ್ಯಕ್ತಿಗಿಂತ ಪಕ್ಷ ಮುಖ್ಯ. ಪಕ್ಷಕ್ಕಿಂತ ದೇಶ ಮುಖ್ಯ ಎನ್ನುವ ಧ್ಯೇಯವಾಕ್ಯ ಬಿಜೆಪಿಯದ್ದು. ಪಕ್ಷದ ವ್ಯವಸ್ಥೆಯಲ್ಲಿ ರಾಜಣ್ಣ ಮತ್ತು ಅವರ ಬೆಂಬಲಿಗರಿಗೆ ಗೌರವ ನೀಡಿ, ತಮ್ಮ ಶಕ್ತಿಯನ್ನು ಬಲಪಡಿಸಿ ಪಕ್ಷ ಸಂಘಟಿಸಲಾಗುವುದು ಎಂದು ತಿಳಿಸಿದರು.
ಮಾಜಿ ಉಪಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಸಂಸದ ಯಧುವೀರ್ ಒಡೆಯರ್, ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್, ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಪಕ್ಷದ ಪ್ರಮುಖರು ಇದ್ದರು.