ಬೆಂಗಳೂರು: ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಸಿಬ್ಬಂದಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿದ (Leopard attack )ಘಟನೆ ನಡೆದಿದೆ. ಕರ್ತವ್ಯದಲ್ಲಿದ್ದ ವೇಳೆ ಚಿರತೆ ಏಕಾಏಕಿ ದಾಳಿ ನಡೆಸಿದ್ದು, ಸಿಬ್ಬಂದಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಶಾಂತಪ್ಪ ಎಂಬ ಸಿಬ್ಬಂದಿ ಇಂದು ಬೆಳಗ್ಗೆ 8.30 ಕ್ಕೆ ಬೋನನ್ನು ಸ್ವಚ್ಛಗೊಳಿಸಲು ಹೋದಾಗ ಚಿರತೆ ಏಕಾಏಕಿ ಅವರ ಮೇಲೆ ಎಗರಿತ್ತು. ಮುಖ ಮತ್ತು ಕುತ್ತಿಗೆ ಭಾಗಕ್ಕೆ ಪರಚಿದ ಗಾಯಗಳುಂಟಾಗಿದ್ದು, ಗಾಯಗೊಂಡ ಸಿಬ್ಬಂದಿಯನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ನಂತರ ಉದ್ಯಾನವನದಲ್ಲಿ ಭದ್ರತಾ ಕ್ರಮಗಳನ್ನು ಹೆಚ್ಚಿಸಲಾಗಿದ್ದು, ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ಸಫಾರಿ ಬಸ್ ನಲ್ಲಿ ಕುಳಿತಿದ್ದ ಮಹಿಳೆಯೊಬ್ಬರ ಮೇಲೆ ಚಿರತೆ ಎರಗಿ ಕೈಗೆ ಗಾಯ ಮಾಡಿತ್ತು. ಈ ಘಟನೆಯ ಬೆನ್ನಲ್ಲೇ ಸಿಬ್ಬಂದಿಯ ಮೇಲೆ ದಾಳಿ ನಡೆಸಿರುವ ಪ್ರಕರಣ ನಡೆದಿದೆ. ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್ ಗೆ ಭೇಟಿ ನೀಡುವ ಪ್ರವಾಸಿಗರಲ್ಲಿ ಆತಂಕ ಹೆಚ್ಚಾಗಿದ್ದು, ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ.
ಆನೆಗಳ ದಾಳಿಗೆ ಒಂದೇ ಕುಟುಂಬದ ನಾಲ್ವರು ಸೇರಿ 6 ಮಂದಿ ಬಲಿ!
ರಾಂಚಿ: ಆನೆಗಳ ದಾಳಿಗೆ ಒಂದು ಕುಟುಂಬದ ನಾಲ್ವರು ಸದಸ್ಯರು ಸೇರಿದಂತೆ ಆರು ಜನರು ಸಾವನ್ನಪ್ಪಿದ ಆಘಾತಕಾರಿ ಘಟನೆ ಜಾರ್ಖಂಡ್ನ ಹಜಾರಿಬಾಗ್ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಕಾಡಾನೆಗಳ ಹಿಂಡು ಒಂದೇ ಕುಟುಂಬದ ನಾಲ್ವರು ಸೇರಿದಂತೆ ಆರು ಜನರನ್ನು ತುಳಿದು ಕೊಂದಿವೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರಾದವರಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರಿದ್ದಾರೆ. ಒಂದು ಮಗು ಕೂಡ ಗಂಭೀರವಾಗಿ ಗಾಯಗೊಂಡಿದೆ ಎಂದು ತಿಳಿದು ಬಂದಿದೆ.ಕಳೆದ ಕೆಲವು ದಿನಗಳಿಂದ ಹಲವಾರು ಜನರ ಮೇಲೆ ದಾಳಿ ಮಾಡಿದ್ದ ಆನೆಗಳ ಹಿಂಡು ಗುರುವಾರ ರಾತ್ರಿ ಚುರ್ಚು ಬ್ಲಾಕ್ನ ಗೊಂಡ್ಯಾರ ಗ್ರಾಮಕ್ಕೆ ನುಗ್ಗಿ ಶುಕ್ರವಾರ ಮುಂಜಾನೆ ಆರು ಜನರನ್ನು ತುಳಿದು ಕೊಂದಿದೆ ಎಂದು ಹಜಾರಿಬಾಗ್ ಪೂರ್ವ ವಿಭಾಗೀಯ ಅರಣ್ಯ ಅಧಿಕಾರಿ (ಡಿಎಫ್ಒ) ವಿಕಾಸ್ ಕುಮಾರ್ ಉಜ್ವಲ್ ತಿಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಗುವನ್ನು ಚಿಕಿತ್ಸೆಗಾಗಿ ಹಜಾರಿಬಾಗ್ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಈ ಹಿಂಡು ಕಳೆದ ಕೆಲವು ದಿನಗಳಿಂದ ಬೊಕಾರೊ, ರಾಮಗಢ ಮತ್ತು ಹಜಾರಿಬಾಗ್ ಜಿಲ್ಲೆಗಳಲ್ಲಿ ಸುತ್ತಾಡುತ್ತಿತ್ತು ಮತ್ತು ಈ ಹಿಂದೆ ಬೊಕಾರೊದಲ್ಲಿ ಸಾವುನೋವುಗಳನ್ನುಂಟು ಮಾಡಿತ್ತು ಎಂದು ಉಜ್ವಲ್ ಹೇಳಿದ್ದಾರೆ.