ಚೆನ್ನೈ: ತಮಿಳುನಾಡಿನಲ್ಲಿ ದೇವಸ್ಥಾನ, ಶಾಲೆ ಮತ್ತು ಬಸ್ ನಿಲ್ದಾಣಗಳಲ್ಲಿ 500 ಮೀಟರ್ ವ್ಯಾಪ್ತಿಯಲ್ಲಿರುವ 717 ಮದ್ಯದಂಗಡಿಗಳನ್ನು ಮುಚ್ಚಿಸಿ ಆದೇಶ ಹೊರಡಿಸಿರುವ ನೂತನ ಮುಖ್ಯಮಂತ್ರಿ ವಿಜಯ್ ಅವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ.
ಮದ್ಯದಂಗಡಿಗಳನ್ನು ಬಂದ್ ಮಾಡುವ ವಿಜಯ್ ಆದೇಶಕ್ಕೆ ಖ್ಯಾತನಟ ವಿಶಾಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ವಿಜಯ್ ಅವರ ಕಾಲೇಜು ದಿನಗಳ ಆಪ್ತ ಗೆಳೆಯರೂ ಆಗಿರುವ ವಿಶಾಲ್ ಎಕ್ಸ್ ಖಾತೆಯಲ್ಲಿ ವಿಡಿಯೊ ಸಂದೇಶ ಹಂಚಿಕೊಂಡಿದ್ದಾರೆ.
ವಿಜಯ್ ನಿಮಗೊಂದು ಹ್ಯಾಟ್ಸ್ ಆಫ್ ಮತ್ತು ಸೆಲ್ಯೂಟ್. ಶಾಲೆ, ದೇವಸ್ಥಾನ ಬಸ್ ನಿಲ್ದಾಣಗಳ ಸಮೀಪವಿರುವ 717 ಮದ್ಯದಂಗಡಿಗಳನ್ನು ಮುಚ್ಚುವ ನಿರ್ಧಾರಕ್ಕೆ ಧನ್ಯವಾದಗಳು. ಇದೊಂದು ಅದ್ಭುತ ನಡೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಈ ನಿರ್ಧಾರದಿಂದ ವಿಶೇಷವಾಗಿ ವಿದ್ಯಾರ್ಥಿನಿಯರು ಎದುರಿಸುತ್ತಿದ್ದ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
234 ಸದಸ್ಯ ಬಲದ ವಿಧಾನಸಭೆಯಲ್ಲಿ 108 ಸ್ಥಾನಗಳನ್ನು ಗೆದ್ದಿದ್ದ ವಿಜಯ್ ಕಾಂಗ್ರೆಸ್, ಎಡಪಕ್ಷಗಳು ಮತ್ತು ವಿಸಿಕೆ ಪಕ್ಷದ ಬೆಂಬಲದೊಂದಿಗೆ ಮುಖ್ಯಮಂತ್ರಿಯಾಗಿದ್ದಾರೆ.