ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಪ್ರತಿಪಕ್ಷಗಳು ನಿರ್ಧರಿಸಿವೆ ಎಂದು ತಿಳಿದು ಬಂದಿದೆ.
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆಯುತ್ತಿರುವಾಗ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನೀಡಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಓಂ ಬಿರ್ಲಾ ಅವರನ್ನು ಸಂವಿಧಾನದ ವಿಧಿ 94-ಸಿ ಅಡಿಯಲ್ಲಿ ಪದಚ್ಯುತಗೊಳಿಸುವ ಗೊತ್ತುವಳಿ ಮಂಡಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆಯುವಾಗ ರಾಹುಲ್ ಗಾಂಧಿ ಅವರಿಗೆ ಸದನದಲ್ಲಿ ಮಾತನಾಡಲು ಅವಕಾಶ ನಿರಾಕರಿಸಲಾಗುತ್ತಿದೆ. ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಕಾಂಗ್ರೆಸ್ ನ ಮಹಿಳಾ ಸಂಸದರ ವಿರುದ್ಧ ಆಧಾರರಹಿತ ಆರೋಪಗಳನ್ನು ಹೊರಿಸಲಾಗುತ್ತಿದೆ. ಮೇಲಾಗಿ ವಿಪಕ್ಷಗಳ 8 ಸಂಸದರನ್ನು ಅಮಾನತುಗೊಳಿಸಿದ್ದಕ್ಕಾಗಿ ಈ ನೋಟಿಸ್ ನೀಡಲಾಗುತ್ತಿದೆ ಎನ್ನಲಾಗುತ್ತಿದೆ.
ಇಂದು ಬೆಳಿಗ್ಗೆ ಕಾಂಗ್ರೆಸ್ ಅಧ್ಯಕ್ಷ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಡೆದ ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಗೊತ್ತುವಳಿ ಮಂಡಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಈ ನಿರ್ಣಯ ಮಂಡಿಸಲು ಸಂಸದರ ಸಹಿಗಳನ್ನು ಸಂಗ್ರಹಿಸಲಾಗುತ್ತಿದೆ. ಈ ನಿರ್ಣಯಕ್ಕೆ ಲೋಕಸಭೆಯಲ್ಲಿ 100 ಸಂಸದರು ಸಹಿ ಹಾಕುವ ಸಾಧ್ಯತೆಯಿದ್ದು, ವಿವಿಧ ಪ್ರತಿಪಕ್ಷಗಳ ಸಂಸದರ ಸಹಿ ಪಡೆಯುವ ಪ್ರಕ್ರಿಯೆ ನಡೆಯುತ್ತಿದೆ. ಇಂದೇ ದು ನಿರ್ಣಯವನ್ನು ಮಂಡಿಸುವ ಸಾಧ್ಯತೆಗಳಿವೆ.
ಸಿಪಿಐ, ಸಿಪಿಐಎಂ, ಟಿಎಂಸಿ ಡಿಎಂಕೆ, ಎಸ್ಪಿ, ಆರ್ಜೆಡಿ, ಶಿವಸೇನಾ (ಯುಬಿಟಿ) , ಎನ್ಸಿಪಿ (ಎಸ್ಪಿ) ಮತ್ತು ಆರ್ಎಸ್ಪಿ ಸೇರಿದಂತೆ ಹಲವು ಪಕ್ಷಗಳ ಪ್ರತಿನಿಧಿಗಳು ಭಾಗವಹಿಸಿದ್ದರು.