ತುಮಕೂರು/ಪಾವಗಡ: ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡು, ಅದನ್ನು ತೀರಿಸಲಾಗದೆ ಮನನೊಂದ ವ್ಯಕ್ತಿಯೊಬ್ಬರು ಮೊಬೈಲ್ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಬಿ.ಕೆ. ಹಳ್ಳಿ ಗ್ರಾಮದಲ್ಲಿ ನಡೆದಿದೆ.
ಘಟನೆಯ ವಿವರ
ಗ್ರಾಮದ ನಿವಾಸಿ ಗೋಪಾಲ್ ಎಂಬುವವರೇ ಟವರ್ ಏರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.
ಗೋಪಾಲ್ ಅವರು ವಿವಿಧ ಮೂಲಗಳಿಂದ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಸಾಲಗಾರರ ಒತ್ತಡ ಹೆಚ್ಚಾದ ಕಾರಣ ಮತ್ತು ಹಣ ವಾಪಸ್ ನೀಡಲು ದಾರಿ ಕಾಣದೆ ತೀವ್ರ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದೇ ಕಾರಣಕ್ಕೆ ಇಂದು ಗ್ರಾಮದ ಮೊಬೈಲ್ ಟವರ್ ಏರಿ ಕೆಳಗೆ ಹಾರಿ ಪ್ರಾಣ ಬಿಡುವುದಾಗಿ ಬೆದರಿಕೆ ಹಾಕಿದ್ದಾರೆ.
ಸ್ಥಳದಲ್ಲಿ ಹೈಡ್ರಾಮಾ
ಗೋಪಾಲ್ ಟವರ್ ಏರುತ್ತಿದ್ದಂತೆಯೇ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರು. ಕೆಳಗೆ ಇಳಿಯುವಂತೆ ಗ್ರಾಮಸ್ಥರು ಎಷ್ಟೇ ವಿನಂತಿಸಿದರೂ ಅವರು ಕೇಳಲಿಲ್ಲ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸುಮಾರು ಹೊತ್ತು ಕಾರ್ಯಾಚರಣೆ ನಡೆಸಿ, ಗೋಪಾಲ್ ಅವರನ್ನು ಸುರಕ್ಷಿತವಾಗಿ ಕೆಳಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಗೋಪಾಲ್ ಅವರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದು, ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸಾಲದ ಹೊರೆಯಿಂದ ಈ ರೀತಿ ಹುಚ್ಚಾಟಕ್ಕೆ ಮುಂದಾದ ಗೋಪಾಲ್ ನಡೆಯಿಂದ ಗ್ರಾಮಸ್ಥರು ಕೆಲಕಾಲ ಆತಂಕಕ್ಕೆ ಒಳಗಾಗಿದ್ದರು.